ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವು ಮತ್ತೆ ಸುಪ್ರೀಂ ಕೋರ್ಟ್ನ ಅಂಗಳಕ್ಕೆ ತಲುಪಿದೆ. ಈ ಪ್ರಕರಣದಲ್ಲಿ ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ಗೆ ಪುನರ್ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಹಿಂದಿನ ಹಂತದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಈಗ ಆ ಆದೇಶದ ಮರುಪರಿಶೀಲನೆಗಾಗಿ ಪವಿತ್ರಾ ಗೌಡ ಅವರು ಈ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಪವಿತ್ರಾ ಗೌಡ ಸುಪ್ರೀಂ ಕೋರ್ಟ್ನ ಜಾಮೀನು ರದ್ದುಪಡಿಸಿದ ತೀರ್ಪಿನ ವಿರುದ್ಧ ಪುನರ್ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಗುರುವಾರ ನಡೆಯಲಿದೆ. ನ್ಯಾಯಮೂರ್ತಿ ಪರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆಯನ್ನು ನಡೆಸಲಿದೆ” ಎಂದು ತಿಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಅರ್ಜಿಯ ಪ್ರತಿಯನ್ನು ಇನ್ನೂ ರಾಜ್ಯ ಸರ್ಕಾರದ ಪರ ವಕೀಲರಿಗೆ ನೀಡಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ. ಅರ್ಜಿಯ ಪ್ರತಿಯನ್ನು ಸ್ವೀಕರಿಸಿದ ನಂತರ ಯಾವ ಆಧಾರದ ಮೇಲೆ ಪವಿತ್ರಾ ಗೌಡರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬುದು ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

