ಹೊಸದಿಗಂತ ವರದಿ ಕಾರವಾರ:
ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅನೀಲಕುಮಾರ ಯಾನೆ ಹಂದಿಸೋಮ (37) ಮತ್ತು ಮಂಗಳೂರು ಪಾಲ್ದೆನೆ ಕುಡುಪು ನಿವಾಸಿ ಹರೀಶ ವಾಸು ಪೂಜಾರಿ (32) ಬಂಧಿತ ಆರೋಪಿಯಾಗಿಲಾಗಿದ್ದು, ಮಾರ್ಚ್ 31 ರಂದು ಕಾರವಾರ ತಾಲೂಕಿನ ಶಿರವಾಡ ಗ್ರಾಮದ ದೇವತಿವಾಡದ ಉಷಾ ಉಲ್ಲಾಸ ನಾಯ್ಕ ಎನ್ನುವವರ ಮನೆಯ ಮುಂದಿನ ಬಾಗಿಲನ್ನು ಒಡೆದು ಒಳ ನುಗ್ಗಿ ಕಬ್ಬಿಣದ ಕಪಾಟನ್ನು ಮೀಟಿ ಮುರಿದು 92 ಸಾವಿರ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿಗಳ ಕುರಿತು ಖಚಿತ ಮಾಹಿತಿ ಆಧರಿಸಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಖದೀಮರು ಕಾರವಾರ, ಮಂಗಳೂರು, ಉಡುಪಿ, ಮೈಸೂರು, ಕೇರಳ ಮೊದಲಾದ ಕಡೆಗಳಲ್ಲಿ ಕಳ್ಳತನದ ಕೃತ್ಯಗಳನ್ನು ನಡೆಸಿರುವುದಾಗಿ ತಿಳಿದು ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠೆ ಡಾ ಸುಮನ್ ಪನ್ನೇಕರ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬದರಿನಾಥ್ ಅವರ ಮಾರ್ಗದರ್ಶನದಲ್ಲಿ ಡಿ.ವೈ.ಎಸ್. ಪಿ ವೆಲೆಂಟನ್ ಡಿಸೋಜ ಅವರ ಸಲಹೆಯಂತೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು, ಉಪ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಪ್ರಕರಣ ದಾಖಲಾದ ಒಂದು ವಾರದ ಒಳಗೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.