ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆಗೆ ದಿನಾಂಕ ನಿಗದಿ ಮಾಡಿ ಕರ್ನಾಟಕ ಚುನಾವಣಾ ಆಯೋಗ ಪತ್ರ ಬರೆದಿದೆ.
ಇದೇ ನವೆಂಬರ್ 11ರಂದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತೆಣಿಕೆಗೆ ದಿನಾಂಕ ನಿಗದಿಪಡಿಸಿ ಕರ್ನಾಟಕ ಚುನಾವಣಾ ಆಯೋಗವು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಕೋಲಾರ ಜಿಲ್ಲಾಧಿಕಾರಿಗೆ ಪತ್ರದ ಮೂಲಕ ಸೂಚನೆ ನೀಡಿದೆ.
ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆಗೆ ಆಗ್ರಹಿಸಿ ಕೋರ್ಟ್ ಮೆಟ್ಟಿಲೇರಿದ್ದ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ತಹಶೀಲ್ದಾರ್ ಕೆಲ ಚುನಾವಣಾ ಸಾಮಗ್ರಿಗಳ ಅಕ್ರಮವಾಗಿ ವಶಕ್ಕೆ ಪಡೆದಿರುವ ಬಗ್ಗೆ ಧ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಇದೀಗ ಚುನಾವಣೆ ಆಯೋಗವು ಸಹ ಕೋಲಾರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ನವೆಂಬರ್ 11 ರಂದು ಮರ ಮತ ಎಣಿಕೆ ಮಾಡುವಂತೆ ಸೂಚಿಸಿದ್ದಾರೆ.
2023ರ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡರು ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡರನ್ನು 248 ಮತಗಳ ಅಂತರದಿಂದ ಗೆದ್ದಿದ್ದರು.

