ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಯೋಗಿ ಆದಿತ್ಯನಾಥ್ ಅಧಿಕಾರಿಗಳು ಹಾಗೂ ಸಚಿವರಿಗೆ ಬಿಸಿ ಮುಟ್ಟಿಸಿದ್ದು, ಮುಂದಿನ ಮೂರು ತಿಂಗಳೊಳಗೆ ತಮ್ಮ ಆಸ್ತಿ ಘೋಷಣೆ ಮಾಡುವಂತೆ ಆದೇಶಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಸಚಿವರು, ಸರ್ಕಾರಿ ಅಧಿಕಾರಿಗಳು ತಾವು ಪ್ರಮಾಣವಚನ ಸ್ವೀಕಾರ ಮಾಡಿದ ಅಥವಾ ಅಧಿಕಾರದ ಚುಕ್ಕಾಣಿ ಹಿಡಿದ ಮೂರು ತಿಂಗಳೊಳಗೆ ತಮ್ಮ ಆಸ್ತಿ ಘೋಷಣೆ ಮಾಡಬೇಕು ಎಂದು ಸೂಚಿಸಿದ್ದಾರೆ.
ಸಚಿವರೊಂದಿಗೆ ಇಂದು ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಾರ್ವಜನಿಕ ಪ್ರತಿನಿಧಿಗಳ ಪಾವಿತ್ರ್ಯತೆ ಕಾಪಾಡುವುದು ಅತಿ ಅವಶ್ಯಕ ಎಂದು ತಿಳಿಸಿದ್ದಾರೆ.
ಐಎಎಸ್ ಅಧಿಕಾರಿಗಳು ತಮ್ಮ ಮತ್ತು ತಮ್ಮ ಕುಟುಂಬದ ಸದಸ್ಯರ ಎಲ್ಲ ಚರ/ಸ್ಥಿರಾಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಬೇಕು. ಇದರ ಜೊತೆಗೆ, ಆನ್ಲೈನ್ ಪೋರ್ಟಲ್ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದಿದ್ದಾರೆ.
ನಮ್ಮ ನಡವಳಿಕೆ ಎಲ್ಲರಿಗೂ ಮಾದರಿಯಾಗಬೇಕು. ಯೋಜನೆಗಳು ಕಾರ್ಯರೂಪಕ್ಕೆ ತರುವ ಸಮಯ ಇದಾಗಿದ್ದು, ಎಲ್ಲ ಸಚಿವರು ಇಲಾಖಾ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಕಿವಿಮಾತು ಹೇಳಿದ್ದಾರೆ.