ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿರುಬೇಸಿಗೆಯ ಬಿಸಿಲಿನ ನರ್ತನ ಶುರುವಾಗಿದೆ. ಸೂರ್ಯ ಬೆಂಕಿಯನ್ನ ಉಗುಳುತ್ತಿದ್ದಾನೆ. ಬೆಳಗ್ಗೆ 8 ಗಂಟೆಗೆ ಬಿಸಿಲು ಧಗಧಗನೆ ಉರಿಯುತ್ತಿದೆ. ದೆಹಲಿ, ಕರ್ನಾಟಕ, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಗುಜರಾತ್, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಎಪಿ, ಛತ್ತೀಸ್ಗಢ ಮತ್ತು ಒಡಿಶಾದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ನಷ್ಟು ತಾಫಮಾನ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಮುಂದಿನ ದಿನಗಳಲ್ಲಿ ಆಲಿಕಲ್ಲು ಮಳೆಯ ತೀವ್ರತೆ ಹೆಚ್ಚಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಡುಗಳು, ಕಟ್ಟಡಗಳು ಮತ್ತು ಆಸ್ಪತ್ರೆಗಳಲ್ಲಿ ಬೆಂಕಿ ಅವಘಡಗಳು ಹೆಚ್ಚಾಗಿವೆ. ಮತ್ತೊಂದೆಡೆ, ಮುಂದಿನ ಐದು ದಿನಗಳಲ್ಲಿ ಪೂರ್ವ, ಮಧ್ಯ ಮತ್ತು ವಾಯುವ್ಯ ಭಾರತದಲ್ಲಿ ಉಷ್ಣವಲಯದ ಪರಿಸ್ಥಿತಿಗಳ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಕ್ಕಳು, ವೃದ್ಧರು ಮತ್ತು ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ತಾಪಮಾನ ಏರಿಕೆ ಹಾಗೂ ಬೆಂಕಿ ಅನಾಹುತಗಳ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿ ಕುರಿತು ಬುಧವಾರ ನಡೆದ ವರ್ಚುವಲ್ ಸಭೆಯಲ್ಲಿ ಮುಖ್ಯಮಂತ್ರಿಗಳು ದೇಶದಲ್ಲಿ ತಾಪಮಾನ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಸಾಮಾನ್ಯಕ್ಕಿಂತ ಎರಡರಿಂದ ಮೂರು ಡಿಗ್ರಿ ಹೆಚ್ಚು ದಾಖಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.