ಹೊಸದಿಗಂತ ವರದಿ ಮಡಿಕೇರಿ:
ಮಡಿಕೇರಿಯ ಮಕ್ಕಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಮಾರು 50 ಲಕ್ಷ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ಕರ್ನಾಟಕ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ ಅವರು ಶುಕ್ರವಾರ ಉದ್ಘಾಟನೆ ಮಾಡಿದರು.
ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಲಾದ ಕಸ ವಿಲೇವಾರಿ ಘಟಕ, ಡಿಜಿಟಲ್ ಗ್ರಂಥಾಲಯ, ಗ್ರಾಮ ಲೆಕ್ಕಿಗರ ಕಚೇರಿ ಹಾಗೂ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಉದ್ಯಾನವನವನ್ನು ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಲೋಕೋಪಯೋಗಿ ಇಲಾಖೆಗಳ ಮೂಲಕ ತಲಾ 20 ಕೋಟಿ ರೂ.ಗಳ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, 10 ಕೋಟಿ ರೂ.ಗಳನ್ನು ಪಟ್ಟಣ ಪಂಚಾಯತ್’ಗಳಿಗೆ ಒದಗಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಕೋರಲಾಗಿದ್ದು, ಶೀಘ್ರವೇ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದರು.
ಮಳೆಗಾಲ ಆರಂಭವಾಗಲಿರುವುದರಿಂದ ರಸ್ತೆ ಡಾಂಬರೀಕರಣ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಂಜಿನಿಯರ್ಗಳಿಗೆ ಸೂಚಿಸಿದ ಅವರು, ಕಾಮಗಾರಿಗಳ ಗುತ್ತಿಗೆ ನೀಡುವ ಸಂದರ್ಭ ಸ್ಥಳೀಯ ಗುತ್ತಿಗೆದಾರರಿಗೆ ಆದ್ಯತೆ ನೀಡುವುದರೊಂದಿಗೆ ಒಂದೇ ಭಾಗದಲ್ಲಿ ಕಾಮಗಾರಿ ನಿರ್ವಹಿಸಲು ಅನುವು ಮಾಡುವಂತೆ ಸಲಹೆ ಮಾಡಿದರು.
ಕಾಯಕ್ರಮದಲ್ಲಿ ಮಕ್ಕಂದೂರು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.