ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ರಾನಿಲ್ ವಿಕ್ರಮಸಿಂಘೆ ಇದೇ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಶ್ರೀಲಂಕಾ ಮಾಧ್ಯಮಗಳ ಪ್ರಕಾರ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಶ್ರೀಲಂಕಾಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಿದ್ದಾರೆ. ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವುದು ಎಲ್ಲರಿಗೂ ತಿಳಿದೇ ಇದೆ. ಈ ಹಿನ್ನೆಲೆಯಲ್ಲಿ ಭಾರತ ಈಗಾಗಲೇ ಶ್ರೀಲಂಕಾಕ್ಕೆ ಸಾಕಷ್ಟು ನೆರವು ಸಹ ನೀಡಿದೆ.
ಎರಡು ದಿನಗಳ ಹಿಂದೆ ಶ್ರೀಲಂಕಾದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ವಿಕ್ರಮ್ ಸಿಂಘೆ, ಭಾರತ ನೀಡಿದ ಆರ್ಥಿಕ ಸಹಾಯಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಭಾರತದೊಂದಿಗೆ ಉತ್ತಮ ಬಾಂಧವ್ಯ ಬಯಸುವುದಾಗಿ ಹೇಳಿದ್ದಾರೆ. ಶ್ರೀಲಂಕಾದ ನೂತನ ಪ್ರಧಾನಿಯೊಂದಿಗೆ ಕೆಲಸ ಮಾಡಲು ಬಯಸುವುದಾಗಿ ಭಾರತವೂ ಹೇಳಿದೆ. ಪ್ರಸ್ತುತ ಶ್ರೀಲಂಕಾದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿಯಿದೆ. ಎಣ್ಣೆ, ಆಹಾರ, ಔಷಧ ಕೂಡ ಸಿಗುತ್ತಿಲ್ಲ. ವಿದ್ಯುತ್ ಸಂಪರ್ಕ, ಸಾರಿಗೆ ಸ್ಥಗಿತಗೊಂಡಿದೆ. ಈಗಾಗಲೇ ಶ್ರೀಲಂಕಾ ಸರ್ಕಾರದ ವಿರುದ್ಧ ಜನ ದಂಗೆ ಎದ್ದಿದ್ದಾರೆ.