ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಕಬ್ಬು ಬೆಳೆಗಾರರು ಮತ್ತು ಕಾರ್ಖಾನೆ ಮಾಲೀಕರ ಮಹತ್ವದ ಸಭೆಯಲ್ಲಿ ತೆಗೆದುಕೊಂಡ ಮಹತ್ತರ ತೀರ್ಮಾನವನ್ನು ಸ್ವಾಗತಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ಕಬ್ಬು ಬೆಳೆಗಾರರು, ರಾಜ್ಯ ರೈತ ಸಂಘ, ಹಸಿರು ಸೇನೆ ಶಾಂತಿಯುತ ಹೋರಾಟ ನಡೆಸಿದ್ದರು. ಇದು ಕಬ್ಬು ಬೆಳೆಗಾರರು, ರೈತ ಸಂಘದ ಹೋರಾಟಕ್ಕೆ ಸಂದ ಜಯ. ಮುಖ್ಯಮಂತ್ರಿಗಳು ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಭೆ ನಡೆಸಬೇಕಿತ್ತು.
ರೈತರು ಬೀದಿಗಿಳಿದು ಹೋರಾಟ ಮಾಡಿ, ಆ ಹೋರಾಟವು ರಾಜ್ಯದ ಇತರ ಜಿಲ್ಲೆಗಳಿಗೆ ಹಬ್ಬುವ ಸಂದರ್ಭದಲ್ಲಿ ನಾವು ಕೂಡ ಹೋರಾಟದ ಸ್ಥಳಕ್ಕೆ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ನೀಡಿದ್ದೆವು. ಬಳಿಕ ಎಚ್ಚೆತ್ತ ಸರ್ಕಾರ, ಮುಖ್ಯಮಂತ್ರಿಗಳು ಈ ಸಭೆ ಕರೆದಿದ್ದರು. ಮುಖ್ಯಮಂತ್ರಿಗಳು ತುಮಕೂರಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದು ಮಾಡಿ ಈ ಸಭೆ ನಡೆಸಿದ್ದಾರೆ. ಸಭೆಯ ತೀರ್ಮಾನವನ್ನು ಸ್ವಾಗತಿಸುವೆ ಎಂದು
ಈ ಸಂಬಂಧ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದಿದ್ದಾರೆ.

