ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಿಸರವನ್ನು ಉಳಿಸುವ ಉದ್ದೇಶದೊಂದಿಗೆ ಇಂದಿನ ಸಮಾಜಕ್ಕೆ ಪ್ರಜ್ಞಾವಂತರಾದ ನಾವೆಲ್ಲರೂ, ಅಭಿಯಾನದ ಮೂಲಕ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದರು.
ಅವರು ಜಿಲ್ಲೆಯ ಹೆಬ್ರಿಯ ವಲಯದ ಕುಕ್ಕಿಕಟ್ಟೆ ಬಾಳೆಬೈಲು ಅರಣ್ಯ ಪ್ರದೇಶದಲ್ಲಿ ಉಡುಪಿ ವಕೀಲರ ಸಂಘ, ಎನ್.ಇ.ಸಿ.ಎಫ್, ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ ಸಹಯೋಗದೊಂದಿಗೆ ಪಶ್ಚಿಮ ಘಟ್ಟಗಳ ಹಸಿರು ಹೊದಿಕೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು
ಎನ್.ಇ.ಸಿ.ಎಫ್ ನ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಮಾತನಾಡಿ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ 2002 ರಿಂದ ಪಶ್ಚಿಮ ಘಟ್ಟದ ಅರಣ್ಯದಲ್ಲಿ ಪ್ರತಿ ವರ್ಷದ ಜೂನ್ ಮತ್ತು ಜುಲೈ ತಿಂಗಳ ಆದಿತ್ಯವಾರ 500 ಹಣ್ಣಿನ ಗಿಡಗಳನ್ನು ನೆಡುತ್ತಾ ಬಂದಿದ್ದೇವೆ. ಈ ವರ್ಷ ನ್ಯಾಯಧೀಶರು, ವಕೀಲರು, ಪೋಲಿಸರನ್ನು ಸೇರಿಸಿಕೊಂಡು ದ.ಕ ಮತ್ತು ಉಡುಪಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದರಿಂದ ಜನರಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಪ್ರಯತ್ನ ನಮ್ಮದಾಗಿದೆ ಎಂದರು.
ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಬಾಲ ನ್ಯಾಯಮಂಡಳಿಯ ಸದಸ್ಯೆ ಮತ್ತು ವಕೀಲೆ ಅಮೃತಕಲಾ, ವಕೀಲರಾದ ರವೀಂದ್ರ, ಆದಿತ್ಯ, ಪ್ರಸಾದ್, ವೈಕುಂಠ ಬಾಳಿಗ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.