ಹೊಸದಿಗಂತ ವರದಿ, ಕಾಸರಗೋಡು:
ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಗಡಿನಾಡು ಕಾಸರಗೋಡಿನ ಕನ್ನಡಿಗರ ಹಿತರಕ್ಷಣೆಗೆ ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಎಂದೆಂದಿಗೂ ಜೊತೆಯಲ್ಲಿದ್ದು ಕನ್ನಡಿಗರ ಹಿತರಕ್ಷಣೆಗೆ ಸದಾ ಕಟಿಬದ್ಧವಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ತಿಳಿಸಿದ್ದಾರೆ.
ಈಗಾಗಲೇ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಇದೇ ಮೊದಲ ಬಾರಿಗೆ ಕನ್ನಡಿಗರ ಹೊರತಾಗಿ ಮಲೆಯಾಳಿಯಾದ ಸುರೇಶ್ ಕುಮಾರ್ ಎಂ. ಅವರನ್ನು ನೇಮಿಸಿ ಕೇರಳ ಸರಕಾರದ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರು ಕೇರಳ ಮುಖ್ಯಮಂತ್ರಿ, ರಾಜ್ಯ ಶಿಕ್ಷಣ ಉಪನಿರ್ದೇಶಕರು ಹಾಗೂ ಕಾಸರಗೋಡು ಜಿಲ್ಲಾಕಾರಿಗಳಿಗೆ ಮನವಿ ಸಲ್ಲಿಸಿ ಕಾನೂನು ಸಂರಕ್ಷಿಸಬೇಕೆಂದು ಹೇಳಿದ್ದಾರೆ. ಅಲ್ಲದೆ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಂವಿಧಾನಬದ್ಧ ಹಕ್ಕು, ಸ್ವಾತಂತ್ರ್ಯ ಹಾಗೂ ಸವಲತ್ತುಗಳನ್ನು ಖಚಿತಪಡಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ