ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ನ ಧುಮ್ಕಾದಲ್ಲಿ ನಡೆದ ಅಪ್ರಾಪ್ತ ಯುವತಿಯ ಹತ್ಯೆಯನ್ನು ಖಂಡಿಸಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಧುಮ್ಕಾ ಜಿಲ್ಲೆಯಾದ್ಯಂತ ನ್ಯಾಯ ನೀಡುವಂತೆ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೋ (ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ) ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
ಈ ಹಿಂದೆ ಕಳೆದ ವಾರ, ಶಾರುಖ್ ಎಂಬಾತ ತನ್ನ ಪ್ರೀತಿ ಪ್ರಸ್ತಾಪವನ್ನು ಒಪ್ಪಿಕೊಂಡಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತ ಯುವತಿಯೊಬ್ಬಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಕೊಂಡೊಯ್ದರೂ ಸುಟ್ಟಗಾಯಗಳು ತೀವ್ರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಳು. ಈ ಹತ್ಯೆಯನ್ನು ಖಂಡಿಸಿ ಜನರು ನ್ಯಾಯಕ್ಕಾಗಿ ಬೀದಿಗಿಳಿದು ಪ್ರತಿಭಟನೆ ಕೈಗೊಂಡಿದ್ದಾರೆ.
ಪ್ರಸ್ತುತ ಪ್ರಕರಣವನ್ನು ತ್ವರಿತ ವಿಲೇವಾರಿಗಾಗಿ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (SJM) ನ್ಯಾಯಾಲಯದಿಂದ ಮೊದಲ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ (ತ್ವರಿತ ಟ್ರ್ಯಾಕ್ ನ್ಯಾಯಾಲಯ) ವರ್ಗಾಯಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಪ್ರಕರಣದ ವಿಚಾರಣೆ ನಡೆಸಲಿರುವ ವಿಶೇಷ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ.