ಹೊಸ ದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಬಿಜೆಪಿ ಸದ್ಯದಲ್ಲೇ ಎರಡು ತಂಡಗಳಲ್ಲಿ 104 ವಿಧಾನಸಭಾ ಕ್ಷೇತ್ರಗಳಿಗೆ ತೆರಳಲಿದೆ. ಇಲ್ಲೆಲ್ಲ ಫಲಾನುಭವಿಗಳ ಸಮಾವೇಶ, ಎಸ್ಸಿ, ಎಸ್ಟಿ, ಒಬಿಸಿ ಕಾರ್ಯಕರ್ತರ ಮನೆಯಲ್ಲಿ ಉಪಹಾರ ಮತ್ತು ಅದೇ ಪರಿಸರದಲ್ಲಿ ಸಭೆ ನಡೆಸಲಾಗುತ್ತದೆ. ಮಠ, ಮಂದಿರಗಳಿಗೆ ಭೇಟಿ ಕಾರ್ಯಕ್ರಮಗಳಿರುತ್ತವೆ. ಇದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಂಗಳವಾರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹಂಚಿಕೊಂಡಿರುವ ಮಾಹಿತಿ.
ಮಳೆ ಅವ್ಯವಸ್ಥೆಗಳ ಹಿನ್ನೆಲೆಯಲ್ಲಿ ಬುಧವಾರದಿಂದ ಆರಂಭಗೊಳ್ಳಬೇಕಿದ್ದ ರಾಜ್ಯಾಧ್ಯಕ್ಷರ ತಂಡದ ಪ್ರವಾಸ ಹಾಗೂ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಇನ್ನೊಂದು ತಂಡದ ಪ್ರವಾಸವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದೂ ಅವರು ತಿಳಿಸಿದರು.
ಪಕ್ಷದ ಎಲ್ಲ ಜನಪ್ರತಿನಿಧಿಗಳು ಸಮಾವೇಶ ಹಾಗೂ ಕ್ಷೇತ್ರ ಪ್ರವಾಸದಲ್ಲಿ ಭಾಗವಹಿಸಲಿದ್ದಾರೆ. ಹುಬ್ಬಳ್ಳಿ, ಬಳ್ಳಾರಿ, ಮೈಸೂರು, ಶಿವಮೊಗ್ಗ, ಬೆಂಗಳೂರು ಸೇರಿ ಪಾಲಿಕೆ ಇರುವ ಕಡೆಗಳಲ್ಲಿ ಪ್ರವಾಸ ನಡೆಯಲಿದೆ.
ರಾಜ್ಯಾಧ್ಯಕ್ಷರ ತಂಡ ಪ್ರವಾಸದ 52 ಕ್ಷೇತ್ರಗಳಲ್ಲಿ ಬೂತ್, ಶಕ್ತಿ ಕೇಂದ್ರಗಳ, ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಲಾಗುವುದು. ಪಂಚರತ್ನ- 5 ಪ್ರಮುಖ ಕಾರ್ಯಕರ್ತರ ಸಭೆ ನಡೆಸಲಾಗುವುದು. ಒಂದು ತಂಡ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಇರಲಿದೆ. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿಗಳ ತಂಡ ಇನ್ನೊಂದು ಭಾಗದಲ್ಲಿ ಪ್ರವಾಸ ಮಾಡಲಿದೆ. ಕೋರ್ ಕಮಿಟಿಯ 16 ಸದಸ್ಯರು ಅವಶ್ಯಕತೆಗೆ ಅನುಗುಣವಾಗಿ ಭಾಗವಹಿಸಲು ಯೋಜಿಸಿದೆ. ರಾಜ್ಯ ಪ್ರಭಾರಿ ಅರುಣ್ ಸಿಂಗ್, ಸಹ ಪ್ರಭಾರಿ ಅರುಣಾ ಅವರು ಪಾಲ್ಗೊಳ್ಳಲಿದ್ದಾರೆ.
ರೈತ ಸಮಾವೇಶ, ಎಸ್ಸಿ ಸಮಾವೇಶ, ಒಬಿಸಿ ಸಮಾವೇಶ, ಯುವ ಸಮಾವೇಶ, ಮಹಿಳಾ ಸಮಾವೇಶ, ಎಸ್ಟಿ, ಅಲ್ಪಸಂಖ್ಯಾತ ಬಂಧುಗಳ ಸಮಾವೇಶವನ್ನೂ ಆಯೋಜಿಸಲಾಗುತ್ತದೆ. ಡಿಸೆಂಬರ್ 15ರೊಳಗೆ 104 ಕ್ಷೇತ್ರ ಪ್ರವಾಸ ಮತ್ತು 7 ಸಮಾವೇಶಗಳನ್ನೂ ಯೋಜಿಸಲಾಗಿದೆ. ಪ್ರವಾಸ ಮತ್ತು ಸಮಾವೇಶ ಯಶಸ್ವಿಗಾಗಿ ಪ್ರಭಾರಿಗಳನ್ನು ನೇಮಿಸಲಾಗಿದೆದೆ.
150 ಕ್ಷೇತ್ರ ಗೆಲುವಿನ ಗುರಿ ಮುಟ್ಟುವ ಹಿನ್ನೆಲೆಯಲ್ಲಿ ಈ ಎಲ್ಲ ಕಾರ್ಯಸಿದ್ಧತೆ ಎಂದು ರಾಜ್ಯ ಬಿಜೆಪಿ ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ