ಹೊಸದಿಗಂತ ವರದಿ ಮಡಿಕೇರಿ:
ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರುವಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಅತ್ತೂರು ನಲ್ಲೂರು ಗ್ರಾಮದ ಭೂತನಕಾಡು ಟಾಟಾ ತೋಟದಲ್ಲಿ ಕಾರ್ಮಿಕರಾಗಿರುವ ಆಲಿ ಎಂಬವರ ಪುತ್ರಿ ಅಬೀಫಾ( 18) ಮಂಗಳವಾರ ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಈಕೆ ಮಡಿಕೇರಿಯ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಮೃತಳ ತಂದೆ ನೀಡಿದ ದೂರಿನನ್ವಯ ಇಬ್ಬರು ಯುವಕರನ್ನು ಸುಂಟಿಕೊಪ್ಪ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಅಯ್ಯಪ್ಪ ಅವರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು, ರಾತ್ರಿ 11 ಗಂಟೆಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
ಅಂತ್ಯಸಂಸ್ಕಾರದ ಸಂದರ್ಭವೂ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.