ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಬರಿಮಲೆ ದೇವಸ್ಥಾನದಲ್ಲಿ 48 ಗಂಟೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಜನದಟ್ಟಣೆ ಉಂಟಾಗಿ ಕೋಯಿಕ್ಕೋಡ್ ನ ಕೊಯಿಲಾಂಡಿ ಮೂಲದ 58 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು ದೇವರ ದರುಶನಕ್ಕಾಗಿ ಹತ್ತು ಗಂಟೆಗೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ನಿಂತಿದ್ದರು. ಇನ್ನು 18 ಮೆಟ್ಟಿಲುಗಳ ಮುಂಭಾಗದಲ್ಲಿ ಸಣ್ಣ ಪ್ರದೇಶದಲ್ಲಿ ಭಕ್ತರು ಕಿಕ್ಕಿರಿದು ತುಂಬಿದ್ದರಿಂದ ನೂಕುನುಗ್ಗಲು ಉಂಟಾಗಿದೆ .
ಇದರ ಬೆನ್ನಲ್ಲೇ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ.
ಕರ್ನಾಟಕ ರಾಜ್ಯದಿಂದ ಪ್ರತಿ ವರ್ಷ ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಶ್ರೀ ಅಯ್ಯಪ್ಪಸ್ವಾಮಿ ದರುಶನಕ್ಕೆ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ, ವಿಶೇಷವಾಗಿ ನವೆಂಬರ್ನಿಂದ ಜನವರಿ ತಿಂಗಳಿನಲ್ಲಿ ಶಬರಿಮಲೆಗೆ ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳುವ ಕರ್ನಾಟಕ ರಾಜ್ಯದ ಹೆಚ್ಚಿನ ಸಂಖ್ಯೆಯ ಭಕ್ತರ ಸುಗಮ ಸೌಲಭ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇರಳ ಸರ್ಕಾರದ ಅಗತ್ಯ ಸಹಕಾರವನ್ನು ನೀಡುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
ಕರ್ನಾಟಕದ ಯಾತ್ರಿಕರು ಹೆಚ್ಚಾಗಿ ಬಳಸುವ ಪ್ರವೇಶ ಮಾರ್ಗಗಳಲ್ಲಿ, ವಿಶೇಷವಾಗಿ ಮಹತ್ವದ ದಿನಗಳಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆ ಮಾಡುವುದು. ಅಗತ್ಯ ವೈದ್ಯಕೀಯ ನೆರವು, ತುರ್ತು ಪ್ರತಿಕ್ರಿಯೆ ಸೇವೆಗಳು ಮತ್ತು ಪ್ರಮುಖ ಸಾರಿಗೆ ಕೇಂದ್ರಗಳಲ್ಲಿ ಆರೋಗ್ಯ ಅಧಿಕಾರಿಗಳೊಂದಿಗೆ ಸಮನ್ವಯ ನಡೆಸುವುದು. ಯಾತ್ರಿಕರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಪೊಲೀಸ್ ಮತ್ತು ಸುರಕ್ಷತಾ ಕ್ರಮಗಳನ್ನು ವಿಶೇಷವಾಗಿ ಸೂಕ್ಷ್ಮ ಅಥವಾ ಹೆಚ್ಚಿನ ಸಾಂದ್ರತೆಯ ಸ್ಥಳಗಳಲ್ಲಿ ವ್ಯವಸ್ಥೆ ಮಾಡುವುದು.
ಯಾತ್ರಿಕರಿಗೆ ಸೌಲಭ್ಯಗಳು ಮತ್ತು ಕಾರ್ಯವಿಧಾನಗಳನ್ನು ಸಮನ್ವಯ ಮತ್ತು ಸಹಾಯ ಮಾಡಲು ಕನ್ನಡ ಭಾಷೆ ಸೇರಿದಂತೆ ಬಹುಭಾಷೆಗಳ ಸಂವಹನ ಹೊಂದಿರುವ ಸಹಾಯ ಕೇಂದ್ರಗಳು ಅಥವಾ ಮಾಹಿತಿ ಕೇಂದ್ರಗಳ ಸ್ಥಾಪನೆ ಮಾಡುವುದು. ತುರ್ತು ಪರಿಸ್ಥಿತಿ ಅಥವಾ ವಿಶೇಷ ಅವಶ್ಯಕತೆಗಳ ಸಂದರ್ಭದಲ್ಲಿ ಕರ್ನಾಟಕದ ಅಧಿಕಾರಿಗಳೊಂದಿಗೆ ಸಮನ್ವಯವನ್ನು ಸಾಧಿಸಲು ಕೇರಳದಲ್ಲಿ ಸಂಪರ್ಕ ಕೇಂದ್ರವನ್ನು ಸ್ಥಾಪಿಸುವುದು. ಪ್ರತಿ ತೀರ್ಥಯಾತ್ರೆಯ ಋತುವಿನಲ್ಲಿ ಕೇರಳ ಸರ್ಕಾರವು ನೀಡುವ ನಿರಂತರ ಸಹಕಾರವನ್ನು ಕರ್ನಾಟಕ ಸರ್ಕಾರವು ಆತ್ಮೀಯವಾಗಿ ಗೌರವಿಸುತ್ತದೆ. ನಿಮ್ಮ ಬೆಂಬಲದೊಂದಿಗೆ, ಈ ವರ್ಷದ ತೀರ್ಥಯಾತ್ರೆಯು ಸುಗಮವಾಗಿ ಮುಂದುವರಿಯುತ್ತದೆ ಮತ್ತು ಎಲ್ಲಾ ಭಕ್ತರಿಗೆ ಸುರಕ್ಷಿತ ಮತ್ತು ಅರ್ಥಪೂರ್ಣ ಅನುಭವವನ್ನು ನೀಡುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

