ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ಸೋಮವಾರ ವಿಚಾರಣೆ ನಡೆಸಿದೆ.
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಬಳಿಕ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಲೋಕಾಯುಕ್ತ ಪೊಲೀಸರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.