March 3, 2026
Tuesday, March 3, 2026
spot_img

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ, ಅದಕ್ಕೆ ಬಹಳ ತಾಳ್ಮೆ ಬೇಕು: ಡಿ.ಕೆ. ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು ಎಂದು ತಿಳಿಸಿದರು.

ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ. ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು ಎಂದು ಬಣ್ಣಿಸಿದರು.‌

ನಿಮಗೆ ವಿಶ್ವ ಮೀನುಗಾರಿಕೆ ದಿನದ ಶುಭಾಶಯಗಳು. ನಿಮಗೆ ಒಳ್ಳೆಯದಾಗಲಿ. ಮುಂದಿನ ದಿನಗಳಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಮೀನುಗಾರಿಕೆಗೆ ಉತ್ತೇಜನ ನೀಡಲು ಕಾರ್ಯಕ್ರಮ ರೂಪಿಸಲಾಗುವುದು. ನಾವು ನಿಮ್ಮ ಜತೆಗೆ ಇದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !