March 4, 2026
Wednesday, March 4, 2026
spot_img

ನನ್ನದು ಕಾಂಗ್ರೆಸ್ ಬಣ, ಸಿಎಂ ಸ್ಥಾನಕ್ಕಿಂತ ಪಕ್ಷದ ಅಧಿಕಾರವೇ ಮುಖ್ಯ: ಡಿಕೆಶಿ ಸ್ಪಷ್ಟ ನುಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಹುದ್ದೆಗಿಂತಲೂ ಪ್ರಮುಖವಾಗಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ತಮ್ಮ ಆದ್ಯತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಪಾದಿಸಿದ್ದಾರೆ.

ಕೆಪಿಸಿಸಿ ಕಚೇರಿಯ ‘ಭಾರತ್ ಜೋಡೋ ಭವನ’ದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಹಾಗೂ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರೊಂದಿಗಿನ ಇತ್ತೀಚಿನ ಭೇಟಿ ಕುರಿತು ಸ್ಪಷ್ಟನೆ ನೀಡಿದರು.

ಸತೀಶ್ ಜಾರಕಿಹೊಳಿ ಪಕ್ಷದ ಆಸ್ತಿ

“ನಾನು ಪಕ್ಷದ ಅಧ್ಯಕ್ಷ, ಸತೀಶ್ ಜಾರಕಿಹೊಳಿ ಅವರು ಪಕ್ಷದ ಕಾರ್ಯಾಧ್ಯಕ್ಷರು. ನಾವಿಬ್ಬರೂ ಆತ್ಮೀಯ ಸ್ನೇಹಿತರು. ನಮ್ಮ ಬಾಂಧವ್ಯ ಉತ್ತಮವಾಗಿದೆ ಮತ್ತು ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ. ಪ್ರಸ್ತುತ ಒಂದೇ ಸಂಪುಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಸತೀಶ್ ಜಾರಕಿಹೊಳಿ ಅವರು ಪಕ್ಷದ ದೊಡ್ಡ ಆಸ್ತಿ. ನಾವು ನಮ್ಮ ಕೆಲಸ ಮುಂದುವರೆಸಿಕೊಂಡು ಹೋಗುತ್ತೇವೆ,” ಎಂದು ಡಿಕೆಶಿ ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿವೆ. ಉಳಿದ ಅವಧಿಯಲ್ಲಿ ಮಾಡಬೇಕಾದ ಕಾರ್ಯಗಳ ಬಗ್ಗೆ ಮಾತ್ರ ಚರ್ಚೆ ನಡೆಸಲಾಗಿದೆ, ಹೊರತು ಬೇರೆ ಯಾವುದೇ ವಿಶೇಷತೆ ಇರಲಿಲ್ಲ ಎಂದು ಅವರು ತಿಳಿಸಿದರು.

‘ನನ್ನ ಸಂಖ್ಯೆ 140’: ಬಣ ರಾಜಕೀಯಕ್ಕೆ ತೆರೆ

ತಮ್ಮ ಬಣ ರಾಜಕೀಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, “ನನ್ನದು ಯಾವುದೇ ಬಣವಿಲ್ಲ. ಇರುವ ಒಂದು ಬಣವೆಂದರೆ ಅದು ‘ಕಾಂಗ್ರೆಸ್ ಬಣ’. ನನ್ನ ಸಂಖ್ಯೆ 140 (ಸೀಟುಗಳ ಗುರಿ),” ಎಂದು ತಮ್ಮ ಶೈಲಿಯಲ್ಲಿ ಸ್ಪಷ್ಟಪಡಿಸಿದರು.

“ಸಾಮೂಹಿಕ ನಾಯಕತ್ವದಲ್ಲಿ ಈ ಪಕ್ಷವನ್ನು ಕಟ್ಟಲಾಗಿದೆ. ಪಕ್ಷಕ್ಕೆ ನಾನೊಬ್ಬನೇ ದುಡಿದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ, ಸಿದ್ದರಾಮಯ್ಯ ಅವರು ಮತ್ತು ಎಲ್ಲಾ ಶಾಸಕರ ಶ್ರಮದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದೇವೆ. ಈ ಅಧಿಕಾರವನ್ನು ಉಳಿಸಿಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಹಾಗೂ ನಾನು ಭೇಟಿ ಮಾಡಿ ಚರ್ಚಿಸಿದ್ದೇವೆ,” ಎಂದು ತಿಳಿಸಿದರು.

ಈ ಭೇಟಿಯಲ್ಲಿ ಯಾವುದೇ ವೈಯಕ್ತಿಕ ವಿಚಾರಗಳಿಲ್ಲ. ವೈಯಕ್ತಿಕ ವಿಚಾರಗಳ ಕುರಿತು ಪಕ್ಷವೇ ತೀರ್ಮಾನ ಮಾಡುತ್ತದೆ. “ಪಕ್ಷ ನಮ್ಮನ್ನು ಗುರುತಿಸಿದೆ. ನಾನು, ಸಿದ್ದರಾಮಯ್ಯ ಅವರು, ಪಕ್ಷದ ಎಲ್ಲಾ ಸಚಿವರು, ಶಾಸಕರು, ಪಂಚಾಯತಿಯಿಂದ ಹಿಡಿದು ಪಾರ್ಲಿಮೆಂಟ್ ವರೆಗೂ ಎಲ್ಲ ಚುನಾವಣೆಯಲ್ಲೂ ಒಟ್ಟಿಗೆ ಕೆಲಸ ಮಾಡುತ್ತೇವೆ,” ಎಂದು ಅವರು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !