ಆನೆಯ ಹಲ್ಲು ಮಾರಾಟ ಯತ್ನ: ಇಬ್ಬರ ಬಂಧನ

ಹೊಸದಿಗಂತ ವರದಿ, ಮಡಿಕೇರಿ:

ಆನೆಯ ದವಡೆ ಹಲ್ಲುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಅರಣ್ಯ ಸಂಚಾರಿ ದಳ ಬಂಧಿಸಿದೆ.
ಬಂಧಿತ ಆರೋಪಿಗಳಿಂದ 20 ಕೆ.ಜಿ ತೂಕದ ಆನೆಯ 3 ದವಡೆ ಹಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಹಿನ್ನೆಲೆ: ಪೊನ್ನಂಪೇಟೆ ತಾಲೂಕಿನ ಮೇಕೂರು ಹೊಸ್ಕೆರೆ ಗ್ರಾಮ ವ್ಯಾಪ್ತಿಯಲ್ಲಿ ಒಟ್ಟು 4 ಮಂದಿ ಆನೆಯ ದವಡೆ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂದು ಅರಣ್ಯ ಸಂಚಾರಿ ದಳಕ್ಕೆ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ನು ಆಧರಿಸಿ ಮಡಿಕೇರಿ ಅರಣ್ಯ ಸಂಚಾರಿ ದಳದ ಉಪ ಸಂರಕ್ಷಣಾ ಅಧಕಾರಿ ಶಿವರಾಮ್ ಬಾಬು ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು.
ಈ ಸಂದರ್ಭ ತಿತಿಮತಿ-ಪಾಲಿಬೆಟ್ಟ ರಸ್ತೆಯ ಪಕ್ಕದಲ್ಲಿರುವ ನಿರ್ಜನ ಪ್ರದೇಶದಲ್ಲಿ ಆನೆ ದವಡೆ ಮಾರಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಇಬ್ಬರು ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಈ ವೇಳೆ ಮತ್ತಿಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ತಲೆ ಮರೆಸಿಕೊಂಡ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಆರೋಪಿಗಳಿಂದ 20 ಕೆ.ಜಿ. ತೂಕದ 3 ದವಡೆ ಹಲ್ಲುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 2 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ನಾಯಕ್, ವಲಯ ಅರಣ್ಯಾಧಿಕಾರಿ ಮಂಜುನಾಥ್ ದೂಳೆ, ಉಪ ವಲಯ ಅರಣ್ಯಾಧಿಕಾರಿ ಚಂದ್ರಶೇಖರ್, ಪಿ.ಗಣಪತಿ, ಜಿ.ವಿಕ್ರಮ, ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕಾಶ್ ಅವರುಗಳು ಕಾರ್ಯಾಚರಣೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!