ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಕುರಿತಂತೆ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂಬ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತಿದೆ. ರೇಣುಕಾಚಾರ್ಯ ಮತ್ತು ಅವರ ಕುಟುಂಬಸ್ಥರಿಗೆ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಟುಂಬ ಸದಸ್ಯನನ್ನು ಕಳೆದುಕೊಂಡಿರುವ ಕಾರಣಕ್ಕೆ ರೇಣುಕಾಚಾರ್ಯ ಭಾವೋದ್ವೇಗಕ್ಕೆ ಒಳಗಾಗಿದ್ದಾರೆ ಅದು ಸಹಜ ಕೂಡ. ಅವರು ಹಿರಿಯರಿದ್ದಾರೆ. ಮಂತ್ರಿಗಳು ಕೂಡ ಆಗಿದ್ದವರು. ಹಾಗಾಗಿ ಭಾವೋದ್ವೇಗ ಬೇಡ ಎಂದಿದ್ದಾರೆ.
ಚಂದ್ರಶೇಖರ್ ಅವರ ಪ್ರಕರಣ ಕುರಿತಂತೆ ಅಸಹಜ ಸಾವು ಎಂದು ದಾಖಲಿಸಿಕೊಳ್ಳಲಾಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು, ಎಫ್.ಎಸ್.ಎಲ್ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಗೊತ್ತಾಗಲಿದೆ. ಆ ಬಳಿಕವೇ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.