ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಹೆಸರು ಘೋಷಿಸಲು ಇಂದು ಶಾಸಕಾಂಗ ಸಭೆ ನಡೆಯಲಿದೆ. ಗುರುವಾರ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾದ ಕೂಡಲೇ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆಯ್ಕೆಯಾಗಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಘೋಷಿಸಿದೆ. ಗುಜರಾತ್ ಜೊತೆಗೆ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಬಂದಿದೆ. ಇದರ ಬೆನ್ನಲ್ಲೇ ಹಿಮಾಚಲದ ಮುಖ್ಯಮಂತ್ರಿಯನ್ನು ಇಂದು ಅಂತಿಮಗೊಳಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿರುವುದು ಗೊತ್ತೇ ಇದೆ. ಫಲಿತಾಂಶ ಹೊರಬಿದ್ದ ಮರುದಿನವೇ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ ಕಸರತ್ತು ಆರಂಭಿಸಿದೆ. ಈ ನಿಟ್ಟಿನಲ್ಲಿ ಪಕ್ಷದ ನಾಯಕರು ಗೆದ್ದಿರುವ ಶಾಸಕರೊಂದಿಗೆ ರಾಜ್ಯ ರಾಜಧಾನಿ ಶಿಮ್ಲಾದ ರಾಜೀವ್ ಭವನದಲ್ಲಿ ಮಧ್ಯಾಹ್ನ 3:00 ಗಂಟೆಗೆ ಶಾಸಕಾಂಗ ಸಭೆ ನಡೆಸಲಿದ್ದಾರೆ. ಹಿರಿಯ ಚುನಾವಣಾ ಮೇಲ್ವಿಚಾರಕ ಭೂಪೇಶ್ ಬಘೇಲ್, ಉಸ್ತುವಾರಿ ರಾಜೀವ್ ಶುಕ್ಲಾ ಮತ್ತು ಭೂಪೇಂದ್ರ ಸಿಂಗ್ ಹೂಡಾ ಅವರು ಮಧ್ಯಾಹ್ನ 1:00 ಗಂಟೆಗೆ ರಾಜೀವ್ ಭವನ ತಲುಪಲಿದ್ದಾರೆ. ಈ ಸಭೆಯಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಪ್ರತಿಭಾ ಸಿಂಗ್ ಭಾಗವಹಿಸಲಿದ್ದಾರೆ. ಆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಆಯ್ಕೆ ಮಾಡಲಾಗುವುದು.
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶವನ್ನು ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿದೆ. ಸಂಜೆ ಮತ ಎಣಿಕೆ ಮುಕ್ತಾಯದ ವೇಳೆಗೆ ಒಟ್ಟು 68 ಸ್ಥಾನಗಳ ಪೈಕಿ 40ರಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿತ್ತು. ಆಡಳಿತಾರೂಢ ಭಾರತೀಯ ಜನತಾ ಪಕ್ಷ 25 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಮೂರು ಸ್ಥಾನಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.