ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುವರ್ಣಸೌಧದ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ವೀರ ಸಾವರ್ಕರ್ ಭಾವಚಿತ್ರ ಅನಾವರಣ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ಆರಂಭಿಸಿದೆ.
ಈ ಸಂದರ್ಭ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸರ್ಕಾರದ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಅಂಜಿ ಫೋಟೋ ವಿಚಾರವನ್ನು ತಂದಿದ್ದಾರೆ ಎಂದು ಆರೋಪಿಸಿದರು.
ಈ ನುಡುವೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದು, ಅಸೆಂಬ್ಲಿ ಹಾಲ್ನಲ್ಲಿ ಮಹರ್ಷಿ ವಾಲ್ಮೀಕಿ, ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನೆಹರು. ನಾರಾಯಣಗುರು, ಡಾ.ಬಿ.ಆರ್.ಅಂಬೇಡ್ಕರ್, ವಲ್ಲಭ ಬಾಯಿ ಪಟೇಲ್, ಬಾಬು ಜಗಜೀವನ ರಾಮ್, ಕುವೆಂಪು ಭಾವಚಿತ್ರವನ್ನು ಅಳವಡಿಸುವಂತೆ ಆಗ್ರಹಿಸಿದ್ದಾರೆ.
ದಾರ್ಶನಿಕರು, ವಿಚಾರವಂತರು, ರಾಷ್ಟ್ರ ನಾಯಕರ ಭಾವಚಿತ್ರ ಅಳವಡಿಸಿ. ಭಾರತದ ಸಂಸ್ಕೃತಿ ಪರಂಪರೆ, ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ವಿಚಾರಧಾರೆ, ಆದರ್ಶ ಸಾರ್ವಕಾಲಿಕ ಸತ್ಯ ಮತ್ತು ಅನುಕರಣೀಯ. ಹೀಗಾಗಿ ಸುವರ್ಣಸೌಧದ ಅಸೆಂಬ್ಲಿ ಹಾಲ್ನಲ್ಲಿ ಇವರೆಲ್ಲರ ಭಾವಚಿತ್ರ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.