ಹೊಸದಿಗಂತ ವರದಿ ಅಂಕೋಲಾ:
ಮುಂಬೈನಿಂದ ಕೇರಳಕ್ಕೆ ಡ್ರೈ ಪ್ರುಟ್ಸ್ ಮತ್ತು ರಾಸಾಯನಿಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ತಾಲೂಕಿನ ವಜ್ರಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಶನಿವಾರ ಬೆಳಿಗ್ಗಿನ ಜಾವ ಸಂಭವಿಸಿದೆ.
ಲಾರಿ ಹೊತ್ತಿ ಉರಿಯುತ್ತಿರುವ ಸುತ್ತ ಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು ಲಾರಿ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.
ಅಂಕೋಲಾ ಮತ್ತು ಯಲ್ಲಾಪುರ ತಾಲೂಕುಗಳ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದ್ದು ರಸ್ತೆ ಪಕ್ಕದಲ್ಲಿ ಇರುವ ವಿದ್ಯುತ್ ಕಂಬಗಳು ಮತ್ತು ತಂತಿ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಕರಕಲಾಗಿದೆ.
ಈ ಅವಘಡದಿಂದಾಗಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದು ಲಾರಿ ಚಾಲಕ ಮತ್ತು ಸಹಾಯಕ ಅದೃಷ್ಟವಶಾತ್ ಪಾರಾಗಿದ್ದಾರೆ. ಅಂಕೋಲಾ ಪಿ.ಎಸ್. ಐ,ಪ್ರವಿಣಕುಮಾರ್ ಮತ್ತು ಸಿಬ್ಬಂದಿಗಳು, ಹೆಸ್ಕಾಂ, ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.