ಹೊಸದಿಗಂತ ವರದಿ ಮಡಿಕೇರಿ:
ಮೂಲತಃ ಕೊಡಗಿನವರಾಗಿದ್ದು, ಅಮೇರಿಕಾದಲ್ಲಿ ವೈದ್ಯಕೀಯ ವೃತ್ತಿಯಲ್ಲಿರುವ ಹೆಸರಾಂತ ಕಿಡ್ನಿ ತಜ್ಞ ಡಾ.ಎಂ.ಎ.ಕಾರ್ಯಪ್ಪ ಅವರು ನಗರದ ಜಿಲ್ಲಾಸ್ಪತ್ರೆಯಲ್ಲಿ ಕಿಡ್ನಿಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ಮಾಡಿದರು.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಪುತ್ರರಾಗಿರುವ ಕಾರ್ಯಪ್ಪ ಅವರು, ಕಿಡ್ನಿಗೆ ಸಂಬಂಧಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದಂತೆ ವಹಿಸಬೇಕಾದ ಕ್ರಮಗಳ ಬಗ್ಗೆಯೂ ಸಲಹೆ ನೀಡಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಾ.ಕಾರ್ಯಪ್ಪ ಅವರು, ದೇಶದಲ್ಲಿರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದರು.
ದೇಶದಲ್ಲಿ ಮೂತ್ರಪಿಂಡ ರೋಗಿಗಳ ಸಂಖ್ಯೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಮೂತ್ರಪಿಂಡಕ್ಕೆ ಸಂಬಂಧಿಸಿದಂತೆ ಹಲವು ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ ಎಂದರು.
ಕಳೆದ ಮೂರು ವರ್ಷದಲ್ಲಿ ಕೋವಿಡ್ ಕಾರಣದಿಂದಾಗಿ ಕೊಡಗು ಜಿಲ್ಲೆಗೆ ಬರಲು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಪ್ರತಿವರ್ಷ ಕೊಡಗು ಜಿಲ್ಲೆಗೆ ಆಗಮಿಸಿ ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಆರೋಗ್ಯ ಸೇವೆ ಕಲ್ಪಿಸಲಾಗುವುದು ಎಂದು ಡಾ.ಕಾರ್ಯಪ್ಪ ಅವರು ಹೇಳಿದರು. ನೂರಾರು ರೋಗಿಗಳು ಕಿಡ್ನಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಳ್ಳಿಚಂಡ ಕಾರ್ಯಪ್ಪ ಇತರರು ಇದ್ದರು.