ಹೊಸದಿಗಂತ ವರದಿ ಶಿವಮೊಗ್ಗ :
ಖಾಲಿ ಇರುವ ಸಚಿವ ಸ್ಥಾನಗಳಲ್ಲಿ ಎಷ್ಟು ಭರ್ತಿ ಮಾಡಲಾಗುತ್ತದೆ ಎಂಬುದರ ಬಗ್ಗೆ ಖಚಿತತೆ ಇಲ್ಲಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡುವುದು ವರಿಷ್ಠರ ವಿವೇಚನೆಗೆ ಬಿಟ್ಟಿದ್ದು, ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನನ್ನ ಅಪೇಕ್ಷೆ. ಜಿಲ್ಲೆಯವರಿಗೆ ಸಚಿವ ಸ್ಥಾನ ಲಭ್ಯವಾದರೆ ಅನುಕೂಲವಾಗಲಿದೆ ಎಂದರು.
ಬಿಜೆಪಿ ನಾಯಕರ ಜೊತೆ ಸ್ಯಾಂಟ್ರೋ ರವಿ ಸಂಪರ್ಕದ ಬಗ್ಗೆ ಕ್ರಮಕೈಗೊಳ್ಳುವುದಾಗಿ ಈಗಾಗಲೇ ಮುಖ್ಯಮಂತ್ರಿ ಹೇಳಿದ್ದಾರೆ. ತನಿಖೆಯಿಂದ ಎಲ್ಲವೂ ಹೊರ ಬರಲಿದೆ.ಕಾನೂನು ಯಾರಿಗೂ ಬಿಡುವುದಿಲ್ಲ. ಇದರಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೂ ಇಲ್ಲ. ಆತನ ಮೇಲೆಯೂ ಕ್ರಮ ಜರುಗಿಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚಿತ್ರದುರ್ಗದಲ್ಲಿ ಕಾಂಗ್ರೆಸ್ನಡೆಸಿದ ಪಕ್ಷದ ಐಕ್ಯತಾ ಸಮಾವೇಶದಲ್ಲಿ ಯಾವುದೇ ಹುರುಳಿಲ್ಲ. ಮೀಸಲಾತಿ ಹೆಚ್ಚಳ ಮಾಡಿ ಬಿಜೆಪಿ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ವಾಸ್ತವವನ್ನು ತಿರುಚಿ ಕಾಂಗ್ರೆಸ್ಸಿಗರು ಮನಬಂದಂತೆ ಮಾತನಾಡುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಕೂಡ ಮನಬಂದಂತೆ ಮಾತನಾಡಿರುವುದು ಗೌರವ ತರುವುದಿಲ್ಲ ಎಂದರು.
ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಮಾಡಬೇಕಿತ್ತು. ಆದರೆ ಮಾಡಿಲ್ಲ. ಮಾಡಿರುವ ಒಳ್ಳೆಯ ಕೆಲಸವನ್ನು ಸ್ವಾಗತ ಮಾಡಬೇಕಿತ್ತು. ಅದನ್ನು ಮಾಡಿಲ್ಲ. ಇನ್ನಾದರೂ ವಾಸ್ತವ ತಿಳಿದು ಮಾತನಾಡುವುದು ಒಳ್ಳೆಯದೆಂದು ಹೇಳಿದರು.