ಹೊಸದಿಗಂತ ವರದಿ ಕಲಬುರಗಿ:
ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿದ ಹಕ್ಕು ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಜ. 19 ರಂದು ಜಿಲ್ಲೆಯ ಸೇಡಂ ತಾಲೂಕಿನ ರಾಷ್ಟ್ರಕೂಟರ ನಾಡು ಮಳಖೇಡ( ಮಾನ್ಯಖೇಟ) ದಲ್ಲಿ ವಿತರಿಸಲಿದ್ದಾರೆ ಎಂದು ಕೆಕೆಆರ್ಟಿಸಿ –ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಏಕಕಾಲಕ್ಕೆ 51,900 ಜನತೆಗೆ ಹಕ್ಕು ಪತ್ರಗಳನ್ನು ವಿತರಿಸುತ್ತಿರುವುದು ಒಂದು ದಾಖಲೆಯಾಗಲಿದೆ. ಇಷ್ಟೊಂದು ಸಂಖ್ಯೆಯಲ್ಲಿ ಹಕ್ಕು ಪತ್ರ ವಿತರಿಸುತ್ತಿರುವುದು ಗಿನ್ನಿಸ್ ಆಫ್ ರೆಕಾರ್ಡ್ ದಲ್ಲಿ ಸೇರ್ಪಡೆಯಾಗಲಿದೆ ಎಂದು ವಿವರಣೆ ನೀಡಿದರು.
ಕಾರ್ಯಕ್ರಮಕ್ಕೆ 2,500 ಸಾರಿಗೆ ಹಾಗೂ 10 ಸಾವಿರ ನಾಲ್ಕು ಚಕ್ರ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದು ಕುಟುಂಬದಿಂದ ಐದು ಸದಸ್ಯರಂತೆ ಭಾಗವಹಿಸುವ ಐದು ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಟೆಂಟ್ ಕಾರ್ಯವೆಲ್ಲ ಸುಮಾರು 60 ಎಕರೆ ಪ್ರದೇಶದಲ್ಲಿ ಹಗಲಿರಳು ನಡೆದಿದೆ ಎಂದು ತಿಳಿಸಿದರು.
ಪ್ರಧಾನಿಗಳ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ, ತಾಂಡಾದ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಸಂಸದ ಡಾ. ಉಮೇಶ್ ಜಾಧವ್ ಸೇರಿದಂತೆ ಇತರೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಸಂದರ್ಭದಲ್ಲಿ ಹತ್ತಾರು ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದು,ಈ ಕುರಿತು ಪಟ್ಟಿ ತಯಾರಿ ನಡೆದಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ದಾಜಿ ಪಾಟೀಲ್, ಸಂಗಮೇಶ ವಾಲಿ ಇದ್ದರು.