ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಕಾಂಗ್ರೆಸ್ ಭದ್ರಕೋಟೆ ಸಂಡೂರಿನಲ್ಲಿಂದು ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಇದರ ಅಂಗವಾಗಿಯೇ ಇಂದು ರಾಜ್ಯಕ್ಕೆ ಬರಲಿರುವ ಅಮಿತ್ ಶಾ ಇತರೆ ಕಾರ್ಯಕ್ರಮಗಳಲ್ಲೂ ಕೂಡ ಭಾಗಿಯಾಗುವರು.
ಬಳ್ಳಾರಿ ಜಿಲ್ಲೆಯ ಸಂಡೂರಿನ ಎಸ್ಆರ್ಎಸ್ ಮೈದಾನದಲ್ಲಿ ಮಧ್ಯಾಹ್ನ ಒಂದೂವರೆ ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಅಮಿತ್ ಶಾ ಜೊತೆಗೆ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂ ಬಿಎಸ್ವೈ, ಅರುಣ್ ಸಿಂಗ್, ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕಾಗಿ ಅದ್ದೂರಿ ವೇದಿಕೆ ಸಿದ್ದಪಡಿಸಲಾಗಿದೆ. ಸುಮಾರು ಒಂದು ಲಕ್ಷ ಜನರಿಗೆ ಆಸನಗಳ ಜೊತೆಗೆ ಊಟೋಪಚಾರದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಇದಾದ ಬಳಿಕ ಬೆಂಗಳೂರಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ಸಂಜೆ ಸಂಡೂರಿನಿಂದ ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದು ಸಂಜೆ 6 ಗಂಟೆಗೆ ಬೆಂಗಳೂರು ಟೌನ್ಹಾಲ್ನಲ್ಲಿ ಪ್ರಬುದ್ಧರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 8 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಸಭೆ ನಡೆಯಲಿದ್ದು, ಅದರಲ್ಲೂ ಶಾ ಭಾಗವಹಿಸಲಿದ್ದಾರೆ.
ಇತ್ತ ಪ್ರಜಾಧ್ವನಿ ಹೆಸರಲ್ಲಿ ಕಾಂಗ್ರೆಸ್ನ ಎರಡನೇ ಹಂತದ ಯಾತ್ರೆ ನಡೆಯುತ್ತಿದ್ದು, ವಿಜಯಪುರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆಯಲಿದ್ದಾರೆ.