ಹೊಸದಿಗಂತ ವರದಿ ಕಲಬುರಗಿ:
ರಾಜ್ಯದಲ್ಲಿ ಕನಿಷ್ಠ 140 ಸ್ಥಾನಗಳನ್ನು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಮಂಗಳವಾರ ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಜನ ಸೇರುತ್ತಿಲ್ಲ. ನಮ್ಮ ಯಾತ್ರೆಯಲ್ಲಿ ಉತ್ಸಾಹದಿಂದ ಜನರು ಸೇರುತ್ತಿದ್ದು, ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಜಿ, ಅಮಿತ್ ಶಾ ಜೀ ಮತ್ತಿತರ ನಾಯಕರ ಭೇಟಿಯು ಬಿಜೆಪಿ ಬಲವನ್ನು ಹೆಚ್ಚಿಸಿದೆ. ಕಾಂಗ್ರೆಸ್ ನಾಯಕರು ಕೇವಲ ಟೀಕೆ ಮಾಡುವುದರಲ್ಲೇ ಸಮಯ ಕಳೆಯುತ್ತಿದ್ದು,ಜವಾಬ್ದಾರಿಯುತ ನಾಯಕರಾದ ರಮೇಶ್ಕುಮಾರ್ ಅವರು, ನಾವೆಲ್ಲ ಸಾಕಷ್ಟು ಮಾಡಿಕೊಂಡಿದ್ದೇವೆ; ತೃಪ್ತಿ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಉತ್ತರ ಕೊಡಬೇಕು ಎಂದು ಹೇಳಿದರು.
ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕರಾದ ದತ್ತಾತ್ರೇಯ ಪಾಟೀಲ್, ಸುಭಾಷ್ ಗುತ್ತೇದಾರ ಇದ್ದರು.