March 4, 2026
Wednesday, March 4, 2026
spot_img

ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು 24 ಗಂಟೆಗಳ ಸೇವೆ: ದಿನೇಶ್‌ ಗುಂಡೂರಾವ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆಗಳ ಸೇವೆಯ ಖಾತ್ರಿ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಕುಷ್ಟಗಿಯ ಬಿಜೆಪಿ ಶಾಸಕ ದೊಡ್ಡನಗೌಡ ಹೆಚ್ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಗತ್ಯ ಸಂಖ್ಯೆಯ ವೈದ್ಯರು, ತಜ್ಞರು ಮತ್ತು ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಮೂಲಕ ಈ ಗುರಿ ಸಾಧಿಸಲಾಗುತ್ತಿದೆ ಎಂದರು.

ಪ್ರತಿ ತಾಲೂಕು ಆಸ್ಪತ್ರೆಯು 24 ಗಂಟೆ ಸೇವೆ ಒದಗಿಸುವುದು ನಮ್ಮ ಉದ್ದೇಶವಾಗಿದೆ. 24 ಗಂಟೆಗಳ ಸೇವೆಯ ಖಾತ್ರಿಗೆ ಈಗ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಇಬ್ಬರು ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರು, ಮಕ್ಕಳ ತಜ್ಞರು, ಒಬ್ಬ ರೇಡಿಯಾಲಜಿಸ್ಟ್ ಮತ್ತು ಒಬ್ಬ ವೈದ್ಯರನ್ನು ಖಚಿತಪಡಿಸಿಕೊಳ್ಳುತ್ತೇವೆ. ಜನರು ಅವರಿಗೆ ಅಗತ್ಯವಿರುವಾಗ ಸೇವೆ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಸಮಯೋಚಿತ ವೈದ್ಯಕೀಯ ಆರೈಕೆಯ ಕೊರತೆಯಿಂದ ಬಾಣಂತಿಯರ ಸಾವುಗಳು ಹೆಚ್ಚಾಗಿ ಸಂಭವಿಸುತ್ತಿವೆ. ತಾಲೂಕು ಆಸ್ಪತ್ರೆಗಳಲ್ಲಿ ಸೇವೆಗಳನ್ನು ಸುಧಾರಿಸುವುದರಿಂದ ಜನರು ಜಿಲ್ಲಾ ಆಸ್ಪತ್ರೆಗಳಿಗೆ ಹೋಗುವುದನ್ನು ತಪ್ಪಿಸಬಹುದು.ಕಾರ್ಯನಿರ್ವಹಣೆ ಕಡಿಮೆ ಇರುವ ತಾಲ್ಲೂಕ್ ಆಸ್ಪತ್ರೆಗಳಲ್ಲಿ 30 ಕ್ಕಿಂತ ಕಡಿಮೆ ಹೆರಿಗೆಗಳಾದರೆ, ಇಬ್ಬರು ಎಂಬಿಬಿಎಸ್ ವೈದ್ಯರೊಂದಿಗೆ ಇಬ್ಬರು ಸ್ತ್ರೀ ರೋಗ ತಜ್ಞರನ್ನು ಬದಲಾವಣೆ ಮಾಡುತ್ತೇವೆ. ಒಬ್ಬರು ಫಿಜಿಸಿಯನ್ ಇರಲಿದ್ದಾರೆ. ಸಂಜೆ 4 ಗಂಟೆ ನಂತರ ಬಾಗಿಲು ಬಂದ್ ಮಾಡಲಾಗುತ್ತಿದ್ದ ಸಮುದಾಯ ಆರೋಗ್ಯ ಕೇಂದ್ರಗಳು ಇದೀಗ 24 ಗಂಟೆಗಳ ಸೇವೆ ಒದಗಿಸಬೇಕಾಗುತ್ತದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !