ಹೊಸದಿಗಂತ ಡಿಜಿಟಲ್ ಡೆಸ್ಕ್ :
ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಪೌರ ಕಾರ್ಮಿಕರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಪೌರ ಕಾರ್ಮಿಕರಾದ ದುಂಡಪ್ಪ(45), ನಾಗಪ್ಪ(42) ಮೃತ ರ್ದುದೈವಿಗಳು.
ಯುಗಾದಿ ಹಬ್ಬದ ಹಿನ್ನೆಲೆ ಬಸವನಕೋಟೆ ಗ್ರಾಮ ಪಂಚಾಯತಿ ಪಿಡಿಒ ಶಶಿಧರ್ ಪಾಟೀಲ್ ಎಂಬುವವರು ಚರಂಡಿ ಸ್ವಚ್ಛಗೊಳಿಸಲು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚರಂಡಿಯ ಸ್ವಚ್ಚತೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಸತ್ಯಪ್ಪ ಮತ್ತು ಮೈಲಪ್ಪ ಮುಂದಾಗಿದ್ದರು.
ಚರಂಡಿ ಸ್ವಚ್ಚಗೊಳಿಸುವಾಗ ವಿಷ ಗಾಳಿ ಸೇವಿಸಿ ಅಸ್ವಸ್ಥರಾಗಿದ್ದು, ಕಾರ್ಮಿಕರನ್ನ ಹತ್ತಿರದ ಅರಸೀಕೆರೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಿ ಬಳಿಕ ಸ್ಥಿತಿ ಗಂಭೀರವಾದ ಹಿನ್ನೆಲೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿ ಆಗದೇ ಇಬ್ಬರು ಪೌರಕಾರ್ಮಿಕರು ಸಾವನ್ನಪ್ಪಿದ್ದಾರೆ.
ಗ್ರಾಮ ಪಂಚಾಯಿತಿಗೆ ಸೇರಿದ ಚರಂಡಿ ಕಾರ್ಯದಲ್ಲಿ ಮೃತರು ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.