ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ತರಲು ಮುಂದಾಗಿರುವ ದ್ವೇಷ ಭಾಷಣ ವಿಧೇಯಕವನ್ನು ಜೆಡಿಎಸ್ ಕಟುವಾಗಿ ವಿರೋಧಿಸಿದ್ದು, ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾನೂನು ಸಂವಿಧಾನ ನೀಡಿರುವ ವಾಕ್ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಸೀಮಿತಗೊಳಿಸುವ ಪ್ರಯತ್ನವಾಗಿದ್ದು, ವಿರೋಧದ ಧ್ವನಿಯನ್ನು ಹತ್ತಿಕ್ಕುವ ಉದ್ದೇಶ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಆರೋಪಿಸಿದರು.
ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರ 1975ರ ತುರ್ತು ಪರಿಸ್ಥಿತಿಯಂತಹ ವಾತಾವರಣವನ್ನು ಮತ್ತೆ ಸೃಷ್ಟಿಸಲು ಹೊರಟಿದೆ ಎಂದು ನಿಖಿಲ್ ಕಿಡಿಕಾರಿದರು. ಸರ್ಕಾರದ ವಿರುದ್ಧ ಪ್ರಶ್ನೆ ಮಾಡುವ ವಿರೋಧ ಪಕ್ಷಗಳು, ರಾಜಕೀಯ ಕಾರ್ಯಕರ್ತರು ಮತ್ತು ಮಾಧ್ಯಮಗಳನ್ನು ಭಯಪಡಿಸಲು ಈ ಕಾನೂನು ಬಳಸಲಾಗುತ್ತದೆ ಎಂಬ ಅನುಮಾನ ವ್ಯಕ್ತಪಡಿಸಿದರು.
ವಿಧೇಯಕದ ವಿರುದ್ಧ ಜೆಡಿಎಸ್ ಸದನದ ಒಳಗೂ ಹೊರಗೂ ಕಾನೂನಾತ್ಮಕ ಹೋರಾಟ ನಡೆಸಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

