ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದಿದೆ.
‘ಹೈಕಮಾಂಡ್’ ಸೂಚನೆಯಂತೆ ನಡೆದ ಸಭೆಯಲ್ಲಿ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾದ ನಂತರದ ಉಂಟಾದ ಬದಲಾವಣೆಗಳ ಕುರಿತು ಚರ್ಚಿಸಲಾಗಿದೆ.
ಕುಮಾರಪಾರ್ಕ್ ರಸ್ತೆಯಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಲಿಂಗಾಯ ಸಮುದಾಯದ ಸಚಿವರು, ಶಾಸಕರು ಸೇರಿ ಹಲವರೊಂದಿಗೆ ಬಿಎಸ್ವೈ ಸಭೆ ನಡೆಸಿದರು.
ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೋಮಣ್ಣ, ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ಸಿದ್ದೇಶ್ವರ್, ಪಿ.ಸಿ ಗದ್ದಿಗೌಡರ್, ಮಂಗಳಾ ಸುರೇಶ್ ಅಂಗಡಿ, ಅಣ್ಣಾ ಸಾಹೇಬ್ ಜೊಲ್ಲೆ, ಶಿವಕುಮಾರ್ ಉದಾಸಿ, ಕರಡಿ ಸಂಗಣ್ಣ, ಬಿ.ವೈ ರಾಘವೇಂದ್ರ, ಜಿ.ಎಸ್ ಬಸವರಾಜ್ ಸೇರಿ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯ ಬಳಿಕ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಸಭೆಯಲ್ಲಿ ಲಿಂಗಾಯತ ಸಿಎಂ ಬಗ್ಗೆ ಘೋಷಣೆ ಆಗಿಲ್ಲ. ಲಕ್ಷ್ಮಣ ಸವದಿ ಅವರು ಸೋತು ಸುಣ್ಣವಾಗಿದ್ದರು. ಆದರೂ, ಅವರಿಗೆ ಉನ್ನತ ಸ್ಥಾನ ನೀಡಲಾಗಿತ್ತು. ಇನ್ನು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಅವರದ್ದು ಸ್ವಯಂಕೃತ ಅಪರಾಧ ಎಂದು ಹೇಳಿದರು.