ಹೊಸದಿಗಂತ ವರದಿ, ವಿಜಯಪುರ :
ವಿಧಾನಸಭಾ ಚುನಾವಣೆ ಕಾವು ತಾರಕಕ್ಕೇರುತ್ತಿರುವುದರ ಮಧ್ಯೆ ವಿಜಯಪುರ ನಗರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚುನಾವಣಾ ಸ್ಪರ್ಧಾ ಕಣದಿಂದ ಹಿಂದೆ ಸರಿದು, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿರುವುದು ಜೆಡಿಎಸ್’ಗೆ ಆಘಾತ ಮೂಡಿಸುವಂತಾಗಿದೆ.
ನಗರ ಮತಕ್ಷೇತ್ರದ ಬಿಜೆಪಿ ಪ್ರಬಲ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳರನ್ನು ಮಟ್ಟ ಹಾಕುವ ನಿಟ್ಟಿನಲ್ಲಿ, ಇಲ್ಲಿನ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ, ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಗೆ ಬೆಂಬಲ ವ್ಯಕ್ತಪಡಿಸಿ, ಕಣದಿಂದ ಹಿಂದೆ ಸರಿದಿದ್ದಾರೆ.
ನಗರ ಮತಕ್ಷೇತ್ರದಲ್ಲಿ ಜೆಡಿಎಸ್’ಗೆ ಸಂಘಟನೆ ಇಲ್ಲ. ಕಾರ್ಯಕರ್ತರ ಪಡೆಯು ಇಲ್ಲ. ಎರಡು ದಿನ ಪ್ರಚಾರ ನಡೆಸಿದಾಗ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ. ಹೀಗಾಗಿ ಸ್ಪರ್ಧಾ ಕಣದಿಂದ ನಾನು ಹಿಂದೆ ಸರಿಯುತ್ತಿದ್ದೇನೆ. ಅಲ್ಲದೇ ನನ್ನ ಮೇಲೆ ಯಾವುದೇ ರೀತಿಯ ಒತ್ತಡವಿಲ್ಲ. ಸ್ವಯಂ ಪ್ರೇರಣೆಯಿಂದ ಕಣದಿಂದ ಹಿಂದೆ ಸರಿಯುತ್ತಿದ್ದೇನೆ. ಈ ಹಿಂದೆ ಯತ್ನಾಳ ಜೆಡಿಎಸ್ ಸೇರಿ ಪಕ್ಷ ಹಾಳು ಮಾಡಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.