ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಂಡ ಕಿಶನ್ ರೆಡ್ಡಿಗೆ ಚಿಕಿತ್ಸೆ ನೀಡುತ್ತಿದ್ದು, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕಿಶನ್ ರೆಡ್ಡಿ ಆಪ್ತರು ಹೇಳಿದ್ದಾರೆ. ಭಾನುವಾರ ರಾತ್ರಿ ಕಿಶನ್ ರೆಡ್ಡಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದಕ್ಕೂ ಮುನ್ನ.. ಕಾರ್ಯಕ್ರಮವೊಂದರಲ್ಲಿ ಕಿಶನ್ ರೆಡ್ಡಿ ಭಾಗವಹಿಸಿದ್ದರು. ಮನ್ ಕಿ ಬಾತ್ ನ ಹತ್ತನೇ ಸಂಚಿಕೆಗೆ ಗೌರವ ನೀಡು ಬಳಿಕ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ಆವರಣದಲ್ಲಿ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ ಹಲವು ಅಂಶಗಳನ್ನು ಆಧರಿಸಿ ಕಲಾ ಪ್ರದರ್ಶನ ಏರ್ಪಡಿಸಲಾಗಿತ್ತು.
ಭಾನುವಾರ ಸಂಜೆ ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಜೊತೆಗೂಡಿ ಕಿಶನ್ ರೆಡ್ಡಿ ಈ ಗ್ಯಾಲರಿ ಆರಂಭಿಸಿದ್ದರು. ಪ್ರಧಾನಿ ಮೋದಿಯವರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಬಗ್ಗೆ ಪ್ರಶಂಸೆಯ ಸುರಿಮಳೆಗೈದರು. ಮನ್ ಕಿ ಬಾತ್ ದೇಶದ ಪರಂಪರೆ, ಇತಿಹಾಸ, ಸಂಸ್ಕೃತಿಯನ್ನು ತಿಳಿಸುತ್ತದೆ ಎಂದು ಕಿಶನ್ ರೆಡ್ಡಿ ಹೇಳಿದರು. ಅದಾದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದರು.