ಹೊಸ ದಿಗಂತ ಡಿಜಿಟಲ್ ಡೆಸ್ಕ್:
10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆಂದು ರಾಜ್ಯ ಸರ್ಕಾರ ಹೇಳಿದೆ. ಈಗಾಗಲೇ ಕೇಂದ್ರ ಸರ್ಕಾರ ತಲಾ 5 ಕೆಜಿ ಅಕ್ಕಿ ಕೊಡುತ್ತಿದೆ. ಹಾಗಾದರೆ ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಸಂಸದರಾದ ಪಿ.ಸಿ. ಮೋಹನ್ ಮತ್ತು ತೇಜಸ್ವಿ ಸೂರ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ಕಿ ಕೊಡಲಾಗದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕುಣಿಯಲಾಗದವನು ನೆಲಡೊಂಕು ಅಂದಂತಾಗಿದೆ ರಾಜ್ಯದ ಸ್ಥಿತಿ. ಜನರನ್ನು ರಾಜ್ಯ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ವಾಗ್ದಾಳಿ ಮಾಡಿದರು.
ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕೇಂದ್ರ ತಾರತಮ್ಯ ಮಾಡಿಲ್ಲ. ಕೇಂದ್ರದ ಮೇಲೆ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ. ಎಫ್ಸಿಐಗೆ ಪತ್ರ ಬರೆಯುವ ಮೊದಲೇ ಮಾರಾಟ ಯೋಜನೆಯ ನಿಯಮಗಳಲ್ಲಿ ಬದಲಾವಣೆ ತರಲಾಗಿತ್ತು. ಅಕ್ಕಿ, ಗೋಧಿ ಮಾರದಂತೆ ಅಂತರ್ ಸಚಿವಾಲಯ ಸಮಿತಿ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಮಾರದಂತೆ ಸೂಚನೆ ಮಾಡಿದೆ. ಅಕ್ಕಿ, ಗೋಧಿ ಕೊರತೆ ಆಗದಂತೆ ಮೇ ತಿಂಗಳಿನಲ್ಲೇ ಕೇಂದ್ರ ನಿಯಮಗಳಲ್ಲಿ ಈ ಬದಲಾವಣೆ ತಂದಿದೆ ಎಂದು ತಿಳಿಸಿದರು.