ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಂಗಳವಾರ ಮುನ್ಸೂಚನೆ ನೀಡಿದೆ .
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ.
ಬೆಂಗಳೂರು ಮಾತ್ರವಲ್ಲದೆ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರಗಳಲ್ಲಿಯೂ ಮಂಗಳವಾರ ಮಳೆಯಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ 25ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ. ಮನೆಗೆ ನುಗ್ಗಿದ ನೀರು ಹೊರ ಹಾಕಲು ಜನ ಹರಸಾಹಸಪಡುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಕೂಡ ನೆರವಿಗೆ ಧಾವಿಸಿದ್ದಾರೆ.
ಚಿಕ್ಕಮಗಳೂರು ನಗರ, ಸಖರಾಯಪಟ್ಟಣ, ಉದ್ದೇಬೋರಹಳ್ಳಿಯಲ್ಲಿ ಭಾರೀ ಮಳೆಯಾಗಿದೆ. ಚಾಮರಾಜನಗರದಲ್ಲಿ ಸುಮಾರು ಒಂದು ತಾಸು ಮಳೆ ಸುರಿದಿದೆ.
ಸಮುದ್ರ ಮಟ್ಟದಿಂದ 900 ಮೀಟರ್ ಎತ್ತರದಲ್ಲಿ ತಮಿಳುನಾಡಿನ ಭಾಗದಲ್ಲಿ ಸುಳಿಗಾಳಿ ಸೃಷ್ಟಿಯಾಗಿದ್ದರಿಂದ ಹಾಗೂ ಬಿಪೋರ್ಜಾಯ್ ಪರಿಣಾಮದಿಂದ ಮಳೆಯಾಗಿದೆ. ಕೇರಳ ಹಾಗೂ ಕರಾವಳಿ ಭಾಗದಲ್ಲಿ ಸುಳಿಗಾಳಿ ಇದ್ದು ಹೀಗಾಗಿ ಮಳೆಯಾಗಲಿದೆ. ಬುಧವಾರದಿಂದ ರಾಜ್ಯದ ಹಲವು ಕಡೆ ಹಗುರ ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 24ರಂದು ಕರಾವಳಿಯಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಆಲರ್ಟ್ ಘೋಷಿಸಿದ್ದು, ವಾಡಿಕೆ ಮಳೆ ಶುರುವಾಗಿತ್ತು. ಅಷ್ಟರಲ್ಲಿ ಬಿಪೋರ್ಜಾಯ್ ಚಂಡಮಾರುತದಿಂದಾಗಿ ಸ್ವಲ್ಪ ವಿಳಂಬವಾಯಿತು. ಚಂಡಮಾರುತ ಕರಾವಳಿಯನ್ನು ದಾಟಿದೆ ಹಾಗೂ ದುರ್ಬಲವಾಗಿದೆ. ಮುಂದಿನ ವಾರಗಳಲ್ಲಿ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.