ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದ ಪ್ರತಿಭಟನೆ ವೇಳೆ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧದ ಪಿತೂರಿ ಕಾನೂನುಬಾಹಿರ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದರು. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎಎಸ್ಐ ಅಮೃತಾ ಅವರು ಪ್ರತಿಭಟನಾಕಾರರನ್ನು ಬಂಧಿಸುವ ವೇಳೆ ಈ ಘಟನೆ ನಡೆದಿದೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಬಂದೋಬಸ್ತ್ನಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಎಎಸ್ಐ ಆಗಿರುವ ಅಮೃತಾ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಚಿನ್ನದ ಮಾಂಗಲ್ಯ ಸರ ಕಳುವಾಗಿರುವುದು ತಿಳಿಯುತ್ತಿದ್ದಂತೆಯೇ ಎಎಸ್ಐ ಅಮೃತಾ ಅವರು ಸ್ಥಳದಲ್ಲೇ ಕಣ್ಣೀರು ಹಾಕಿದ ಘಟನೆ ನಡೆಯಿತು. ಕರ್ತವ್ಯ ನಿರತ ಅಧಿಕಾರಿಯೊಬ್ಬರ ಸರವೇ ಕಳುವಾಗಿರುವುದು ಇಲಾಖೆಗೆ ಮತ್ತು ಸಹೋದ್ಯೋಗಿಗಳಿಗೆ ಭಾರೀ ಮುಜುಗರ ಹಾಗೂ ಆತಂಕ ತಂದಿದೆ. ಕೂಡಲೇ ಸ್ಥಳದಲ್ಲಿದ್ದ ಇತರೆ ಪೊಲೀಸ್ ಅಧಿಕಾರಿಗಳು ಅಮೃತಾ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಪ್ರಯತ್ನ ಮಾಡಿದರು.
SHOCKING | ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯವನ್ನೇ ಕದ್ದ ಖದೀಮರು!

