ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಮಮತಾ ಬ್ಯಾನರ್ಜಿ ಯ ತೃಣಮೂಲ ಕಾಂಗ್ರೆಸ್ (TMC) ನಿಂದ ಇತ್ತೀಚೆಗೆ ಅಮಾನತುಗೊಂಡಿದ್ದ ಶಾಸಕ ಹುಮಾಯೂನ್ ಕಬೀರ್ ಅವರು ಡಿಸೆಂಬರ್ 22ರಂದು ಸ್ವಂತ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಕಬೀರ್ ಅವರನ್ನು ಇತ್ತೀಚೆಗೆ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಇದೀಗ ಮುಂದಿನ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಮುಂದೆ ತಾವು ಯಾವ ಪಕ್ಷದೊಂದಿಗೆ ಮೈತ್ರಿ ಮಾಡಬೇಕು ಎಂಬುದನ್ನು ಕೂಡ ನಿರ್ಧರಿಸುವುದಾಗಿ ತಿಳಿಸಿದ್ದಾರೆ.
ಹೊಸ ಪಕ್ಷ ಸ್ಥಾಪನೆಯ ದಿನದಂದು ತನ್ನೊಂದಿಗೆ ಮುರ್ಷಿದಾಬಾದ್ ಜಿಲ್ಲಾಧ್ಯಕ್ಷ ಸೇರಿದಂತೆ 75 ಸದಸ್ಯರು ಇರಲಿದ್ದಾರೆ. ಇವರೊಂದಿಗೆ ರಾಜ್ಯ ಸಮಿತಿಯನ್ನು ಘೋಷಿಸುತ್ತೇನೆ. ಇದರ ಅನಂತರ ಯಾವ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಳ್ಳಬೇಕೆಂದು ನಿರ್ಧರಿಸುವುದಾಗಿ ತಿಳಿಸಿದರು.
ಮುಸ್ಲಿಂ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಕಬೀರ್, 1992ರಲ್ಲಿ ಅಯೋಧ್ಯೆಯಲ್ಲಿ ಕೆಡವಲಾದ 16ನೇ ಶತಮಾನದ ಬಾಬರಿ ಮಸೀದಿಯನ್ನು ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಹೇಳಿ ಇತ್ತೀಚೆಗೆ ಶಿಲಾನ್ಯಾಸ ನೆರವೇರಿಸಿದ್ದರು.
ಚುನಾವಣೆ ಹತ್ತಿರುವಿರುವ ಸಮಯದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸರಿಯಲ್ಲ. ತಮ್ಮ ಬೆಂಬಲಿಗರ ಬೇಡಿಕೆಯ ಮೇರೆಗೆ ಡೆಬ್ರಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದರು.

