ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಂಬೂತಿರಿ ಎಂದೇ ಖ್ಯಾತರಾಗಿದ್ದ ಖ್ಯಾತ ಕಲಾವಿದ ಕರುವಟ್ಟು ಮನ ವಾಸುದೇವನ್ ನಂಬೂತಿರಿ ಅವರು ವಯೋಸಹಜ ಕಾಯಿಲೆಯಿಂದ ಇಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರಿಗೆ 98 ವರ್ಷ ವಯಸ್ಸಾಗಿತ್ತು.
ಕಲಾವಿದ ನಂಬೂತಿರಿ ವಿವಿಧ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಕೆಲವು ಚಲನಚಿತ್ರಗಳಲ್ಲಿ ಕಲಾ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ದೇ, ಮಲಯಾಳಂ ಚಿತ್ರರಂಗದಲ್ಲಿ ಹಲವಾರು ಪ್ರಮುಖ ಪಾತ್ರಗಳನ್ನು ಚಿತ್ರಿಸಿದ್ದಾರೆ.
ವಾಸುದೇವನ್ ನಂಬೂತಿರಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಟ್ವಿಟರ್ನಲ್ಲಿ ಪ್ರಧಾನಿ ಮೋದಿ,’ಶ್ರೀ ಕೆಎಂ ವಾಸುದೇವನ್ ನಂಬೂತಿರಿ ಜಿ ಅವರು ತಮ್ಮ ಅಪ್ರತಿಮ ಕಲಾಕೃತಿಗಾಗಿ ಸ್ಮರಿಸಲ್ಪಡುತ್ತಾರೆ. ಅವರ ಸೃಜನಶೀಲತೆ ಮತ್ತು ಇತಿಹಾಸ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಅಂಶಗಳನ್ನು ಜನಪ್ರಿಯಗೊಳಿಸುವ ಪ್ರಯತ್ನಗಳಿಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ಅವರ ನಿಧನದಿಂದ ದುಃಖಿತವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬದೊಂದಿಗೆ ಇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಧಾನಸಭೆ ಸ್ಪೀಕರ್ ಎ.ಎನ್. ಶಂಸೀರ್ ಮತ್ತು ಕೇಂದ್ರ ರಾಜ್ಯ ಸಚಿವ ವಿ ಮುರಳೀಧರನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.