ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯೋಜಿಸಿರುವ ಪ್ರತಿಪಕ್ಷಗಳ ಔತಣಕೂಟದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ. ಆದ್ರೆ ಜುಲೈ 18 ರಂದು ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಾವಹಿಸಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ಶನಿವಾರ ತಿಳಿಸಿವೆ.
ಶಸ್ತ್ರಚಿಕಿತ್ಸೆಯ ನಂತರದ ಪ್ರೋಟೋಕಾಲ್ಗಳನ್ನು ಅನುಸರಿಸಬೇಕಾಗಿರುವುದರಿಂದ ಜುಲೈ 17 ರಂದು ಪ್ರತಿಪಕ್ಷದ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ.
ಜೂನ್ 27 ರಂದು ಉತ್ತರ ಬಂಗಾಳದ ಸೆವೋಕ್ ಏರ್ಬೇಸ್ನಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ವೇಳೆ ಮಮತಾ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಗುರುವಾರ ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ಮಮತಾ ಬ್ಯಾನರ್ಜಿ ಅವರು ಎಡ ಮೊಣಕಾಲಿಗೆ ಮೈಕ್ರೋಸರ್ಜರಿ ಮಾಡಿಸಿಕೊಂಡಿದ್ದಾರೆ.
ವೈದ್ಯರು, ದೀದಿಗೆ ವಿಮಾನದಲ್ಲಿ ಪ್ರಯಾಣಿಸಲು ಮತ್ತು ವಿರೋಧ ಪಕ್ಷಗಳ ಸಭೆಗೆ ಹಾಜರಾಗಲು ಅನುಮತಿ ನೀಡಿದ್ದರೂ, ವಿಶ್ರಾಂತಿ ಪಡೆಯುವಂತೆ ಅವರಿಗೆ ಸೂಚಿಸಲಾಗಿದೆ. ಆದ್ದರಿಂದ ಅವರು ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಜುಲೈ 18 ರಂದು ದಿನವಿಡೀ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 17 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳಿಗೆ ಔತಣಕೂಟವನ್ನು ಏರ್ಪಡಿಸಿದ್ದಾರೆ. ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯೊಂದಿಗೆ ಸಭೆಗೆ ಆಗಮಿಸುತ್ತಾರೆ ಮತ್ತು ಅವರ ಟಿಎಂಸಿ ಪ್ರತಿನಿಧಿಗಳಾಗಿ ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.