ಮಣಿಪುರದಲ್ಲಿ ಹೇಯಕೃತ್ಯ: ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ‌ಸುಪ್ರೀಂ ಕೋರ್ಟ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿರುವ ಹೇಯ ಕೃತ್ಯವೊಂದು ಮಣಿಪುರದಲ್ಲಿ ನಡೆದಿದೆ. ಈ ಘಟನೆಯ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ಮೋದಿ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ.

ಇದೀಗ ದೇಶದ ಅತ್ಯುನ್ನತ ನ್ಯಾಯಾಲಯ ಸುಪ್ರೀಂಕೋರ್ಟ್ ಸಹ ಪ್ರತಿಕ್ರಿಯಿಸಿದ್ದು, ಈ ಘಟನೆ ಸಂಪೂರ್ಣ ಸಾಂವಿಧಾನಿಕ ವೈಫಲ್ಯ ಎಂದಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಲ್ಲದೆ, ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕೆಂದು ಸೂಚನೆ ನೀಡಿದ್ದಾರೆ.

ಒಂದು ವೇಳೆ ಸರ್ಕಾರವು ಕ್ರಮ ತೆಗೆದುಕೊಳ್ಳದಿದ್ದರೆ ಸುಪ್ರೀಂಕೋರ್ಟ್​ ಕೈಗೆತ್ತುಕೊಳ್ಳಲಿದೆ ಎಂದು ಚಂದ್ರಚೂಡ್​ ಅವರು​ ಎಚ್ಚರಿಕೆ ನೀಡಿದ್ದು, ಈ ಪ್ರಕರಣದ ವಿಚಾರಣೆಯನ್ನು ಜುಲೈ 28ರಂದು ಮಾಡುವುದಾಗಿ ಹೇಳಿದೆ.

ಏನಿದು ಘಟನೆ?

ನಿನ್ನೆಯಿಂದ ಟ್ವಿಟರ್​ನಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯರಿಬ್ಬರನ್ನು ಮಣಿಪುರದಲ್ಲಿ ಪುರುಷರ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿದೆ.

ಈ ಘಟನೆ ಮೇ 4ರಂದು ಮಣಿಪುರ ರಾಜಧಾನಿ ಇಂಫಾಲ್​ನಿಂದ 35 ಕಿ.ಮೀ. ದೂರದಲ್ಲಿರುವ ಕೊಂಗ್​ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

ಪರಿಶಿಷ್ಟ ಪಂಗಡಗಳ (ST) ಸ್ಥಾನಮಾನಕ್ಕಾಗಿ ಮೈತೀಸ್​ ಸಮುದಾಯ ಇಟ್ಟಿರುವ ಬೇಡಿಕೆಯ ಕುರಿತು ಮಣಿಪುರದ ಮೈತೀಸ್​ ಮತ್ತು ಕುಕಿ ಬುಡಕಟ್ಟುಗಳ ನಡುವೆ ಘರ್ಷಣೆಗಳು ಉಂಟಾಗಿರುವ ನಡುವೆಯೇ ಈ ಭಯಾನಕ ಘಟನೆಯೂ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!