ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ದೆಹಲಿ ಪ್ರವಾಸದಲ್ಲಿದ್ದು, ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಸ್ಥಾನದ ಆಯ್ಕೆ ಬಾಕಿ ಇರುವ ವೇಳೆ ವಿಜಯೇಂದ್ರ ಹೈಕಮಾಂಡ್ ಭೇಟಿಯು ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ.
ರಾಜ್ಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿಯನ್ನು ಸಮರ್ಥಿಸಿಕೊಂಡು, ಕಾಂಗ್ರೆಸ್ ಪಕ್ಷವನ್ನು ಟೀಕಿಸಿ, ಸದನದ ಗಮನ ಸೆಳೆಯುವಂತೆ ಮಾತನಾಡಿದ್ದ ಬಿ.ವೈ ವಿಜಯೇಂದ್ರ ಅಧಿವೇಶನ ಮುಕ್ತಾಯಕ್ಕೂ ಮೊದಲೇ ದಿಢೀರ್ ದೆಹಲಿಗೆ ತೆರಳಿದ್ದು, ಅಮಿತ್ ಶಾ, ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು
ಸದ್ಯ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇದ್ದು, ಈ ವಿಚಾರ ಸದನದಲ್ಲಿನ ಹೋರಾಟಕ್ಕೂ ಬಿಜೆಪಿಗೆ ಹಿನ್ನಡೆಯಾಗಿದೆ. ಅಧಿವೇಶನ ಆರಂಭದ ವೇಳೆ ಪ್ರತಿಪಕ್ಷ ನಾಯಕರ ಆಯ್ಕೆ ಮಾಡುವುದಾಗಿ ಹೇಳಿದ್ದ ಹೈಕಮಾಂಡ್ ಅಧಿವೇಶನ ಮುಗಿಯುತ್ತಾ ಬಂದರೂ ನೇಮಕ ಮಾಡಿಲ್ಲ. ಈ ಕುರಿತು ಮಾತುಕತೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.