ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ನಾಳೆ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ: ಎನ್.ರವಿಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯೂ ಸೇರಿದಂತೆ ವೈಫಲ್ಯಗಳನ್ನು ಖಂಡಿಸಿ ಜುಲೈ 22ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಕುಸಿದಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ 48 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ಕೊಲೆಗಳು ನಡೆದಿವೆ. ವಿದ್ಯುತ್ ಸೇರಿದಂತೆ ಜೀವನಾವಶ್ಯಕ ಬೆಲೆಗಳು ತೀವ್ರವಾಗಿ ಹೆಚ್ಚಾಗಿದ್ದು, ಜನರು ಜೀವನ ಮಾಡುವುದೇ ದುಸ್ತರವಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರಕಾರದ ಬಜೆಟ್ ಅಲ್ಪಸಂಖ್ಯಾತರ ಪರ ಮಾತ್ರವಲ್ಲ; ಹಿಂದೂಗಳ ವಿರೋಧಿ, ರೈತ ವಿರೋಧಿ, ನೀರಾವರಿ ವಿರೋಧಿ ಮತ್ತು ಶಿಕ್ಷಣ ವಿರೋಧಿಯಾಗಿದೆ. ಕೇಂದ್ರ ಸರಕಾರವನ್ನು ತೆಗಳುವ ಬಜೆಟ್ ಇದಾಗಿದೆ ಎಂದಿರುವ ರವಿಕುಮಾರ್ ಅವರು, ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳು ಅಂತರರಾಷ್ಟ್ರೀಯ ವ್ಯಾಪ್ತಿಯನ್ನು ಹೊಂದಿರುವ ಸಾಧ್ಯತೆ ಇದ್ದು, ಈ ಪ್ರಕರಣವನ್ನು ತನಿಖೆಗಾಗಿ ಎನ್‍ಐಎಗೆ ಹಸ್ತಾಂತರ ಮಾಡುವಂತೆ ಅವರು ಆಗ್ರಹಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವೈಫಲ್ಯವನ್ನು ಖಂಡಿಸಿ ಪ್ರತಿಭಟನೆ ನಡೆಯಲಿದೆ. ಸಭಾಧ್ಯಕ್ಷರು ವಿಧಾನಮಂಡಲದ ಕಲಾಪವನ್ನು ಸರ್ವಾಧಿಕಾರಿಯಂತೆ ನಡೆಸಿದ್ದಾರೆ. ಅಲ್ಲದೆ ಪ್ರತಿಪಕ್ಷವನ್ನು ಹತ್ತಿಕ್ಕಲಾಗಿದೆ. ವಿಧಾನಮಂಡಲದಲ್ಲಿ ಸಭಾಧ್ಯಕ್ಷರು ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ್ದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!