ಕರ್ನಾಟಕವನ್ನು ಬರ‌ಪೀಡಿತ ರಾಜ್ಯವೆಂದು ಘೋಷಿಸಲು ನಾಳೆ ಬಾ ಎನ್ನುವ ಧೋರಣೆ ಏಕೆ ?: ಸರ್ಕಾರದ ವಿರುದ್ಧ ಈಶ್ವರಪ್ಪ ಕಿಡಿ

ಹೊಸದಿಗಂತ ವರದಿ ಶಿವಮೊಗ್ಗ:

ಕರ್ನಾಟಕವನ್ನು ಬರ‌ಪೀಡಿತ ರಾಜ್ಯವೆಂದು ಘೋಷಣೆ ಮಾಡುವಲ್ಲಿ ರಾಜ್ಯ ಸರ್ಕಾರ ನಾಳೆ ಬಾ ಎನ್ನುವ ಧೋರಣೆ ಅನುಸರಿಸುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಜಲಾಶಯಗಳಲ್ಲಿ ನೀರಿಲ್ಲ.‌ ಬೆಳೆದಿರುವ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಆದರೂ ಬರ ಘೋಷಣೆ ಮಾಡದೆ ಕಾದು ನೋಡುವ ತಂತ್ರ ಅನುಸರಿಸಲಾಗುತ್ತದೆ. ಕೊನೆ ದಿನಗಳಲ್ಲಿ ಮಳೆ ಬಂದರೆ ಬರ‌ಘೋಷಣೆ ಮಾಡದೆ ಪರಿಹಾರವನ್ನು ನೀಡದೆ ಇರಬಹುದೆಂಬ ಮನಸ್ಥಿತಿಯಲ್ಲಿ ಸರ್ಕಾರವಿದೆ ಎಂದರು.

ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಪರಿಹಾರ ಕೊಡಿ ಎಂದರೆ ಆತ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೈಯಕ್ತಿಕ ನೋವಿನಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ಸ್ವತಃ ಸಚಿವರೇ ಹೇಳಿದ್ದಾರೆ. ಇದು ರೈತ ವಿರೋಧಿ ನೀತಿಯಾಗಿದೆ. ಈ ರೀತಿ ಹೇಳುವ ಸಚಿವರನ್ನು ರಾಜಕೀಯ ಜೀವನದಲ್ಲೇ ನೋಡಿಲ್ಲ ಎಂದರು.

ರಾಜ್ಯದಲ್ಲಿ ಬರ ಆವರಿಸಿದ್ದರೂ ಯಾವ ಜಿಲ್ಲೆಯ ಉಸ್ತುವಾರಿ ಸಚಿವರೂ ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ರೈತರ ಆಹವಾಲು ಆಲಿಸುತ್ತಿಲ್ಲ. ಇವರು ಲೋಕಸಭೆ ಚುನಾವಣೆಯಲ್ಲೂ ಗೆಲ್ಲುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆಯಲ್ಲಿ ಇವರನ್ನು ಸೋಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ವಿರೋಧಿ ಶಕ್ತಿಗಳೆಲ್ಲಾ ಒಂದಾಗಿ ಸೇರಲಾಗುತ್ತಿದೆ. ಈ ಬಾರಿಯೂ 28 ಸ್ಥಾನಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿಯಲಾಗುತ್ತದೆ ಎಂದರು.

ಕಳೆದ ಬಾರಿ ಕಾಂಗ್ರೆಸ್ ಒಂದು ಸ್ಥಾನ ಪಡೆದಿತ್ತು. ಈ ಬಾರಿ ಒಂದೂ ಸ್ಥಾನ ಪಡೆಯದಂತೆ ಕಾಂಗ್ರೆಸ್ ವಿರೋಧಿ ಮತಗಳನ್ನು ಕ್ರೋಢೀಕರಿಸಿ ಜಯಗಳಿಸಲಾಗುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!