ಹೊಸದಿಗಂತ ತುಮಕೂರು
ತುಮಕೂರು ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಲಿರುವ ‘ಕರ್ನಾಟಕ ಕ್ರೀಡಾಕೂಟ 2025-26’ಕ್ಕೆ ಭವ್ಯ ಚಾಲನೆ ದೊರೆತಿದೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ಸಮಾರಂಭದಲ್ಲಿ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಕ್ರೀಡಾಕೂಟದ ಅಧಿಕೃತ ಲಾಂಛನವನ್ನು ಬಿಡುಗಡೆಗೊಳಿಸಿದರು.
ತುಮಕೂರು ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಈ ಕ್ರೀಡಾ ಸಂಭ್ರಮ ಆಯೋಜನೆಯಾಗಿದೆ. ಜನವರಿ 16 ರಿಂದ 22ರವರೆಗೆ ಏಳು ದಿನಗಳ ಕಾಲ ಕಲ್ಪತರು ನಾಡು ತುಮಕೂರಿನಲ್ಲಿ ರಾಜ್ಯದ ವಿವಿಧ ಭಾಗಗಳ ಕ್ರೀಡಾಪಟುಗಳು ತಮ್ಮ ಕೌಶಲ ಪ್ರದರ್ಶಿಸಲಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಡಾ. ಕೆ. ಗೋವಿಂದರಾಜ್ ಉಪಸ್ಥಿತರಿದ್ದರು. ಅಲ್ಲದೆ, ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್, ಕ್ರೀಡಾ ಇಲಾಖೆ ಆಯುಕ್ತ ಚೇತನ್ ಆರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಶುಭ ಹಾರೈಸಿದರು.

