February 8, 2026
Sunday, February 8, 2026
spot_img

ಬಾಂಗ್ಲಾದ ಹಿಂದುಗಳ ಮೇಲಿನ ಹಲ್ಲೆ ಖಂಡಿಸಿ ಬಂಗಾಳದಲ್ಲಿ ಪ್ರತಿಭಟನೆ, ಹಿಂಸಾಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆ ಮತ್ತು ಹಿಂದು ಯುವಕ ದೀಪು ಚಂದ್ರ ದಾಸ್‌ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಬುಧವಾರ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ.

ಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಜೀವನಾಡಿಯಾದ ಹೌರಾ ಸೇತುವೆ ತಲುಪದಂತೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಾಗ ಹೌರಾ ನಿಲ್ದಾಣದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಬಾಂಗ್ಲಾದೇಶದ ಮೈಮೆನ್ಸಿಂಗ್ ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು ಮತ್ತು ಹೌರಾ ಸೇತುವೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದರು.

ಪೊಲೀಸರು, ಪ್ರತಿಭಟನಾ ಮೆರವಣಿಗೆಯನ್ನು ಮುಂದುವರಿಸದಂತೆ ತಡೆದಾಗ, ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತು ಬ್ಯಾರಿಕೇಡ್‌ಗಳನ್ನು ಭೇದಿಸಲು ಪ್ರಯತ್ನಿಸಿದರು, ಇದು ಘರ್ಷಣೆಗೆ ಕಾರಣವಾಯಿತು.

ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯ ಭಾರತ-ಬಾಂಗ್ಲಾದೇಶ ಗಡಿ ಮತ್ತು ಉತ್ತರ 24 ಪರಗಣ ಜಿಲ್ಲೆಯ ಪೆಟ್ರಾಪೋಲ್ ಅಥವಾ ಘೋಜದಂಗಾ ಗಡಿಗಳಲ್ಲಿ ಹಿಂದೂಪರ ಸಂಘಟನೆಗಳ ವಿವಿಧ ಗುಂಪುಗಳು ರಫ್ತು ಮತ್ತು ಆಮದು ವಸ್ತುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆದು ಪ್ರತಿಭಟಿಸಿದರು.

ಡಿಸೆಂಬರ್ 18 ರಂದು, ಬಾಂಗ್ಲಾದೇಶದ ಮೈಮೆನ್ಸಿಂಗ್‌ ಜಿಲ್ಲೆಯ ಬಲುಕಾದಲ್ಲಿ 25 ವರ್ಷದ ಗಾರ್ಮೆಂಟ್ಸ್ ಕಾರ್ಖಾನೆಯ ಕೆಲಸಗಾರ ದೀಪು ಚಂದ್ರ ದಾಸ್ ಅವರನ್ನು ದೇವದೂಷಣೆಯ ಆರೋಪದ ಮೇಲೆ ಉದ್ರಿಕ್ತ ಗುಂಪೊಂದು ಹೊಡೆದು ಕೊಂದಿತ್ತು. ಅಲ್ಲದೇ ಆತನ ಮೃತದೇಹವನ್ನು ವಿವಸ್ತ್ರಗೊಳಿಸಿ ಮರಕ್ಕೆ ನೇಣು ಹಾಕಿ ಬೆಂಕಿ ಹಚ್ಚಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !