ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಿದೆ. ಇದನ್ನು ತೀವ್ರವಾಗಿ ವಿರೋಧಿಸಿ ಜನವರಿ ಐದರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕಾಂಗ್ರೆಸ್ ಪಕ್ಷದಿಂದ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕರ್ನಾಟಕ ಭವನದಲ್ಲಿ ಮಾತನಾಡಿದರು.
ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದೆ. ಜನವಸತಿಗೆ ಅದು ಸೂಕ್ತವಾದ ಪ್ರದೇಶವಲ್ಲ.
ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟಿಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಒದಗಿಸಲು ಇಲಾಖೆಯ ಕಾರ್ಯದರ್ಶಿ ಹಾಗೂ ಜಿಬಿಎ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

