ಹೊಸದಿಗಂತ ವರದಿ ಹಾವೇರಿ:
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಘೋಷಣೆಗಳಲ್ಲಿ ಭರವಸೆ ನೀಡಿದಂತೆ ಕೂಡಲೇ ರಾಜ್ಯಾದ್ಯಂತ ಕೆಲಸ ಮಾಡುತ್ತಿರುವ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ, ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಮ್ಮ ಕೆಲಸಗಳನ್ನು ಖಾಯಂ ಮಾಡುವಂತೆ, ರಾಜ್ಯ ಸರ್ಕಾರ ತುರ್ತು ಅನುಮೋದನೆ ಕೊಡಬೇಕು. ಈಗಾಗಲೇ ನ.23ರಿಂದ ತರಗತಿ ಬಹಿಷ್ಕರಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಕುರಿತು ಸಂಘಟನೆ ಜಿಲ್ಲಾಧ್ಯಕ್ಷ ಡಾ. ಪ್ರಶಾಂತ ಬೆನ್ನೂರ ಮಾತನಾಡಿ, ಕಳೆದ 27 ವರ್ಷಗಳಿಂದ ಈ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಈ ಕುರಿತು ಇಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾrf ಅಂದು ವಿರೋಧ ಪಕ್ಷದಲ್ಲಿ ಇದ್ದಾಗ ನಮ್ಮ ಪರವಾಗಿ ಸದನದಲ್ಲಿ ಧ್ವನಿ ಎತ್ತಿದ್ದರು. ಚುನಾವಣೆ ವೇಳೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕೆಲಸ ಖಾಯಂ ಮಾಡುವ ಭರವಸೆಯನ್ನು ತಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದರು. ಈಗ ಅದನ್ನು ಈಡೇರಿಸ ಬೇಕೆಂದು ಒತ್ತಾಯಿಸಿದರು.
ದಿನಂಪ್ರತಿ ಬೆಳಗ್ಗೆ 10 ರಿಂದ ಸಂಜೆ 5ಗಂಟೆಯವರೆಗೆ ಪಾಠ ಬೋಧನೆ, ಪರೀಕ್ಷಾ ಕಾರ್ಯ, ಪರೀಕ್ಷಾ ಮೌಲ್ಯ ಮಾಪನ ಹೀಗೆ ಎಲ್ಲಾ ಕೆಲಸ ಕಾರ್ಯ ನಿರ್ವಹಿಸುತ್ತೇವೆ. ಆದಾಗ್ಯೂ ಏಕೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತೀರಿ ಎಂದು ಅಸಮಾಧಾನ ಹೊರಹಾಕಿದರು.