ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕಾಶಿಯ ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲಾದ ಕಾರ್ಮಿಕರನ್ನು ಋಷಿಕೇಶದಲ್ಲಿ ಇರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್) ಬುಧವಾರ ಕರೆತರಲಾಯಿತು. ಮುನ್ನೆಚ್ಚರಿಕೆಯ ಕ್ರಮವಾಗಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು.
ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್ ಮೂಲಕ ಏಮ್ಸ್ಗೆ ಕರೆತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಮಿಕರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಕೂಲಂಕಷವಾಗಿ ತಪಾಸಣೆ ನಡೆಸಲಿದ್ದಾರೆ ಎಂದು ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಮಿಕರೆಲ್ಲ ಆರೋಗ್ಯವಾಗಿರುವಂತೆ ಕಾಣುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
ಕಾರ್ಮಿಕರ ವರ್ತನೆ, ರಕ್ತದ ಒತ್ತಡ, ರಕ್ತದಲ್ಲಿ ಆಮ್ಲಜನಕದ ಪ್ರಮಾಣ ಹಾಗೂ ಇತರ ಎಲ್ಲ ಆರೋಗ್ಯ ಸೂಚಕಗಳು ಸಹಜವಾಗಿ ಇವೆ ಎಂದು ಹೇಳಿದ್ದಾರೆ. ಅಗತ್ಯ ಕಂಡುಬಂದರೆ ಹೆಚ್ಚಿನ ತಪಾಸಣೆ ನಡೆಸಲಾಗುತ್ತದೆ ಎಂದಿದ್ದಾರೆ. ಕಾರ್ಮಿಕರನ್ನು ಮನಃಶಾಸ್ತ್ರಜ್ಞರು ಕೂಡ ಪರೀಕ್ಷಿಸಲಿದ್ದಾರೆ. ಕಾರ್ಮಿಕರನ್ನು ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.