ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ದೇಶದೆಲ್ಲೆಡೆ ಮೆಚ್ಚುಗೆ:ಸಚಿವ ಡಾ. ಜಿ.ಪರಮೇಶ್ವರ

ಹೊಸದಿಗಂತ ವರದಿ,ತುಮಕೂರು:

ಆಡಳಿತವನ್ನು ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಜನತಾದರ್ಶನ ನಡೆಸಲಾಗುತ್ತಿದ್ದು, ಈ ಮೂಲಕ ಸಾರ್ವಜನಿಕರು ಸುಲಭವಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಹೇಳಿದರು.

ಕೊರಟಗೆರೆ ತಾಲ್ಲೂಕು ಕೇಂದ್ರದಲ್ಲಿ ಆಯೋಜಿಸಿದ್ದ ‘ಜಿಲ್ಲಾ ಜನತಾದರ್ಶನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಸ್ಪತ್ರೆ, ಶಾಲೆಗಳ ಸಮಸ್ಯೆ ,ಕಂದಾಯ ಇಲಾಖೆಗೆ ಸಂಬಂಧಿಸಿದ ಪಹಣಿ ತಿದ್ದುಪಡಿ, ಜಮೀನು ಸರ್ವೇ, ಜಮೀನು ಒತ್ತುವರಿ ಮತ್ತು ಗುರುತು ಪತ್ತೆ ಹಚ್ಚುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದು, ಈ ಬಗ್ಗೆ ದೂರುಗಳನ್ನು ಸಾರ್ವಜನಿಕರು ಸಲ್ಲಿಸುತ್ತಿದ್ದಾರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಜನತಾದರ್ಶನ ಕಾರ್ಯಕ್ರಮದಿಂದ ಜನರು ಅಧಿಕಾರಿಗಳನ್ನು ನೇರವಾಗಿ ಭೇಟಿಯಾಗಿ ದೂರು ಸಲ್ಲಿಸಿ, ಪರಿಹಾರ ಕಂಡುಕೊಳ್ಳುತ್ತಿದ್ದಾರೆ, ಇದರಿಂದ ವಿನಾಕಾರಣ ಮಧ್ಯವರ್ತಿಗಳ ಕಾಟದಿಂದ ಹಣ ಖರ್ಚು ಮಾಡುವದು ತಪ್ಪಿದೆ.

ಅಧಿಕಾರಿಗಳು ಚುರುಕಾಗಿ ಕೆಲಸ ಮಾಡಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು, ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವುದಾಗಿ ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆ ನೀಡಿದ್ದೆವು. ಇಂತಹ ಯೋಜನೆಗಳನ್ನು ಜಾರಿಗೊಳಿಸಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಇದೀಗ ಅದೇ ಪಕ್ಷದವರು ಬೇರೆ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದಾರೆ. ನಮ್ಮ ಜನಪರ ಸರ್ಕಾರವನ್ನು ಇಡೀ ದೇಶವೇ ಒಪ್ಪಿಕೊಂಡಿದ್ದು, ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದರು.

ಜನರಿಗಾಗಿ ನಿವೇಶನ ನಿರ್ಮಾಣ: 
ಜನರ ಸರ್ವತೋಮುಖಿ ಅಭಿವೃದ್ಧಿ ನಿಟ್ಟಿನಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಈಸವಲತ್ತುಗಳ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು, ತೋಟಗಾರಿಕಾ ಇಲಾಖೆಯು ಅರ್ಜಿ ಸಲ್ಲಿಸಿದ ಎಲ್ಲ ರೈತರ ನೀರಾವರಿ ವ್ಯವಸ್ಥೆಗಾಗಿ ಸ್ಪ್ರಿಂಕ್‌ಲರ್‌ಗಳನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 2 ಸಾವಿರ ಎಕರೆ ಸರ್ಕಾರಿ ಜಮೀನನ್ನು ಸಾರ್ವಜನಿಕರಿಗೆ ವಸತಿ ಒದಗಿಸಲು ಗುರುತಿಸಲಾಗಿದೆ.‌ ಆಶ್ರಯ ಯೋಜನೆಯಡಿ ಹಳ್ಳಿಗಳಿಗೆ ಹೊಂದಿಕೊಂಡಿರುವ ಈ ಜಮೀನುಗಳಲ್ಲಿ ನಿವೇಶನ ನಿರ್ಮಿಸಿ, ಮನೆ ಕಟ್ಟಿಸಿಕೊಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಸು ಮರಣದ ಪರಿಹಾರದ ಚೆಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಜಿಲ್ಲಾಧಿಕಾರಿ ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು,ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಸಿಇಒ ಪ್ರಭು, ಪೊಲೀಸ್ ಅಧೀಕ್ಷಕ ಅಶೋಕ್, ಉಪವಿಭಾಗಾಧಿಕಾರಿ ರಿಷಿ ಆನಂದ್, ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅಪೂರ್ವ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!