ಕೊರೋನಾ ನೂತನ ರೂಪಾಂತರಿ ತಳಿಯ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಡಳಿತಕ್ಕೆ ಸಚಿವ ಭೋಸರಾಜು ಸೂಚನೆ

ಹೊಸ ದಿಗಂತ ವರದಿ,ಮಡಿಕೇರಿ:

ಕೇರಳದಲ್ಲಿ ಕೊರೋನಾ ರೂಪಾಂತರಿ ಜೆಎನ್‌.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಎಸ್‌ ಭೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಭಾನುವಾರ ದೂರವಾಣಿ ಮೂಲಕ ಮಾತನಾಡಿ, ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡ ಅವರು, ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕೊರೋನಾ ಪತ್ತೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆ ಸನ್ನದ್ಧವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನು ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಕ್ರಮಗಳನ್ನ ಕೈಗೊಳ್ಳಬೇಕು.

ಕೊರೋನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಯನ್ನು ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!